ಮಂಗಳೂರು: ಜಿಲ್ಲೆಯಲ್ಲಿ ಸೋಮವಾರ 245 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 261 ಜನರು ಗುಣಮುಖರಾಗಿದ್ದಾರೆ. ಮೃತಪಟ್ಟ 6 ಮಂದಿಗೆ ಕೋವಿಡ್–19 ಇರುವುದು ಸೋಮವಾರ ಖಚಿತವಾಗಿದೆ.
ಜಿಲ್ಲೆಯಲ್ಲಿ ಈವರೆಗೆ 1,71,996 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 1,47,439 ಮಂದಿಯ ವರದಿ ನೆಗೆಟಿವ್ ಬಂದಿದೆ. 24,557 ಮಂದಿಗೆ ಕೋವಿಡ್–19 ದೃಢಪಟ್ಟಿದೆ. 574 ಮಂದಿ ಮೃತಪಟ್ಟಿದ್ದಾರೆ. 18,407 ಮಂದಿ ಗುಣಮುಖರಾಗಿದ್ದು, ಸದ್ಯ 5,579 ಸಕ್ರಿಯ ಪ್ರಕರಣಗಳಿವೆ.
ದಂಡದ ಎಚ್ಚರಿಕೆ: ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಸರ್ಕಾರದ ಆದೇಶವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಡಳಿತ ಮುಂದಾಗಿದ್ದು, ಸೋಮವಾರದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಿಕ್ಕಿಬಿದ್ದರೆ ದುಬಾರಿ ದಂಡ ವಸೂಲು ಮಾಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಈಗಾಗಲೇ ಈ ಬಗ್ಗೆ ಅಧಿಕೃತ ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಸೂಚನೆಯಂತೆ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ ₹1ಸಾವಿರ ಹಾಗೂ ಇತರ ಪ್ರದೇಶಗಳಲ್ಲಿ ₹500 ದಂಡ ವಿಧಿಸಲಾಗುತ್ತದೆ. ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರದಿಂದಲೇ ದುಬಾರಿ ದಂಡ ವಿಧಿಸಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
4,860 ಪ್ರಕರಣ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 4,860 ಪ್ರಕರಣ ದಾಖಲಿಸಲಾಗಿದ್ದು, ₹5,85,825 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.
ಕಾಸರಗೋಡು: 207 ಮಂದಿಗೆ ಕೋವಿಡ್
ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 207 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಸಂಪರ್ಕ ಮೂಲಕ 189 ಮಂದಿಗೆ ಸೋಂಕು ತಗಲಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.
ಸೋಮವಾರ 170 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 12,476 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 11,108 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. 8,904 ಮಂದಿ ಗುಣಮುಖರಾಗಿದ್ದು, 3,467 ಸಕ್ರಿಯ ಪ್ರಕರಣಗಳಿವೆ. ಮೃತರ ಸಂಖ್ಯೆ 105 ಕ್ಕೆ ಏರಿದೆ.