ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಆದರೆ, ಕನ್ನಡದ ಅಭಿವೃದ್ಧಿಗೆ ನಿಜವಾದ ಕೊಡುಗೆ ನೀಡಿದವರು ತುಳುವರು. ಅವರನ್ನು ಸರ್ಕಾರ ಕಡೆಗಣಿಸಿದೆ ಎಂದು ಅವರು ಆರೋಪಿಸಿದರು.
ಕನ್ನಡ, ಕರ್ನಾಟಕದ ಅಭಿವೃದ್ಧಿಗೆ ಶತ ಶತಮಾನಗಳಿಂದ ಕೊಡುಗೆ ನೀಡಿದ ತುಳು, ಕೊಡವ ಇತ್ಯಾದಿ ಕರ್ನಾಟಕ ಅಂತರ್ಗತವಾದ ಸ್ಥಳೀಯ ಪ್ರಾದೇಶಿಕ ಭಾಷೆಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಅವರು ಒತ್ತಾಯಿಸಿದರು.