ಘಟನೆ ಹಿನ್ನೆಲೆ: ಪ್ರವೀಣ್ ಕುಮಾರ್ ತನ್ನ ತಂದೆಯ ಅಕ್ಕ ಅಪ್ಪಿ ಶೇರಿಗಾರ್ತಿ ಸೇರಿದಂತೆ ಮನೆಯಲ್ಲಿದ್ದ ನಾಲ್ಕು ಮಂದಿಯನ್ನು 1994ರ ಫೆಬ್ರವರಿ 23ರ ಮಧ್ಯರಾತ್ರಿ ಕೊಲೆ ಮಾಡಿ, ಸುಮಾರು ₹ 80 ಸಾವಿರ ಮೌಲ್ಯದ ಚಿನ್ನಾಭರಣ, ₹ 5,000 ನಗದು ಎಗರಿಸಿ ಪರಾರಿಯಾಗಿದ್ದ. ಆತನನ್ನು ಪೊಲೀಸರು ಬಂಧಿಸಿದ್ದರು. ಒಂದು ಜೈಲಿನಿಂದ ಮತ್ತೊಂದು ಜೈಲಿಗೆ ಸಾಗಿಸುತ್ತಿದ್ದ ವೇಳೆ ತಪ್ಪಿಸಿಕೊಂಡಿದ್ದ ಆರೋಪಿ ಸುಮಾರು ನಾಲ್ಕು ವರ್ಷಗಳ ಕಾಲ ಗೋವಾದಲ್ಲಿ ತಲೆ ಮರೆಸಿಕೊಂಡಿದ್ದ. ಕೊಲೆಗೆ ಮುನ್ನವೇ ವಿವಾಹಿತನಾಗಿದ್ದ ಆತ ಗೋವಾದಲ್ಲಿ ತಲೆ ಮರೆಸಿಕೊಂಡಿದ್ದ ಸಂದರ್ಭದಲ್ಲಿ ಮತ್ತೆ ಮದುವೆಯಾಗಿದ್ದ. ಆ ವೇಳೆ ಆತನ ಪತ್ತೆಗೆ ಬಹುಮಾನದ ಘೋಷಿಸಲಾಗಿತ್ತು. ಆಗ ಆತ ಎರಡನೇ ವಿವಾಹವಾಗಿದ್ದ ಮಹಿಳೆಯ ತಮ್ಮನೇ ಪೊಲೀಸರಿಗೆ ಮಾಹಿತಿ ನೀಡಿದ್ದ. ನಂತರ ಮತ್ತೆ ಅವನನ್ನು ಬಂಧಿಸಲಾಗಿತ್ತು ಎಂದು ಸೀತಾರಾಮ ಗುರುಪುರ ಭಾವುಕರಾಗಿ ವಿವರಿಸಿದರು.