ಉಜಿರೆ: ಹೊಸಕಟ್ಟೆ ಉತ್ಸವದೊಂದಿಗೆ ಸೋಮವಾರ ಧರ್ಮಸ್ಥಳದಲ್ಲಿ ಪ್ರಸಕ್ತ ಸಾಲಿನ ಲಕ್ಷ ದೀಪೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ಲಭಿಸಿತು. ಡಿ.3ರಂದು ಲಕ್ಷದೀಪೋತ್ಸವ ನಡೆಯಲಿದೆ. ಡಿ. 4ರಂದು ಚಂದ್ರನಾಥ ಸ್ವಾಮಿಯ ಸಮಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಸಮಾಪನಗೊಳ್ಳಲಿದೆ.
ನ.30ರಂದು ಕೆರೆಕಟ್ಟೆ ಉತ್ಸವ, ಡಿ.1ರಂದು ಲಲಿತೋದ್ಯಾನ ಉತ್ಸವ, ಡಿ.2ರಂದು ಕಂಚಿಮಾರುಕಟ್ಟೆ ಉತ್ಸವ, ಡಿ.3ರಂದು ಗೌರಿಮಾರುಕಟ್ಟೆ ಉತ್ಸವ ನಡೆಯಲಿವೆ. ಡಿ.2ರಂದು ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನವನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಉದ್ಭಾಟಿಸುವರು.
ದೇವಸ್ಥಾನ, ಬೀಡು, ವಸತಿ ಛತ್ರಗಳು ಹಾಗೂ ಉದ್ಯಾನಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಕೆಎಸ್ಆರ್ಟಿಸಿ ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.
ಬೆಂಗಳೂರಿನ ಎಸ್. ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸುವರು. ಅಂದು ಸಾಹಿತ್ಯ ಸಮ್ಮೇಳನವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸುವರು. ಕರ್ನಾಟಕ ಸಂಸ್ಕೃತ ವಿ.ವಿ ವಿಶ್ರಾಂತ ಕುಲಪತಿ ಡಾ.ಮಲ್ಲೇಪುರಂ ಜಿ. ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಲಕ್ಷ ದೀಪೋತ್ಸವ ನಿಮಿತ್ತ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ನಡೆದ ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು.