ಉಜಿರೆ: ಇಲ್ಲಿನ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ, ಉಜಿರೆ ನಿವಾಸಿ ಡಾ.ಬಿ. ಯಶೋವರ್ಮ (67) ಭಾನುವಾರ ತಡರಾತ್ರಿ ಸಿಂಗಪುರದಲ್ಲಿ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ.
ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ ಅವರು ಸಿಂಗಪುರಕ್ಕೆ ಹೋಗಿದ್ದರು.
ಬೆಳ್ತಂಗಡಿ ತಾಲ್ಲೂಕಿನ ಪೆರಾಡಿ ಬೀಡು ನಿವಾಸಿಯಾದ ಅವರು, ಮೂಡುಬಿದಿರೆ ಜೈನ್ ಹೈಸ್ಕೂಲಿನ 'ಕನ್ನಡ ಪಂಡಿತ'ರೆಂದೇ ಚಿರಪರಿಚಿತರಾಗಿದ್ದ ದಿವಂಗತ ಟಿ. ರಘು ಚಂದ್ರ ಶೆಟ್ಟಿ ಅವರ ಮಗ.
ಸಸ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾದ ಅವರು ಧಾರವಾಡದಲ್ಲಿ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಬಳಿಕ ಉಜಿರೆಯ ಎಸ್ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ನಿವೃತ್ತರಾದ ಬಳಿಕ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದರು.
ಉತ್ತಮ ವಾಗ್ಮಿ, ಶಿಸ್ತಿನ ಸಿಪಾಯಿ, ನೇರ ನಡೆ-ನುಡಿಯ ಅವರು ದಕ್ಷ ದಕ್ಷ ಆಡಳಿತಗಾರರಾಗಿದ್ದರು.
ಉಜಿರೆಯನ್ನು ಜಾಗತಿಕ ನಕಾಶೆಯಲ್ಲಿ ಗುರುತಿಸುವಂತೆ ಭಗೀರಥ ಪ್ರಯತ್ನ ಮಾಡಿರುವ ಅವರು, ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಅವರ ಸಹೋದರ.