ಮೂಡುಬಿದಿರೆ (ದಕ್ಷಿಣ ಕನ್ನಡ): ಬೆಂಗಳೂರಿನ ಲೇಖಕ ಡಾ.ಗಜಾನನ ಶರ್ಮ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ ಮತ್ತು ಚಿಕ್ಕಮಗಳೂರಿನ ಡಾ.ಎಚ್. ಸತ್ಯನಾರಾಯಣ ಅವರಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವರ್ಧಮಾನ ಪ್ರಶಸ್ತಿ ಪೀಠದ 2021ರ ಸಾಲಿನ ವರ್ಧಮಾನ ಪ್ರಶಸ್ತಿ ಪ್ರದಾನ ಸಮಾರಂಭ ದಸರಾ ಸಾಹಿತ್ಯ ಉತ್ಸವದ ಅಂಗವಾಗಿ ಸಮಾಜ ಮಂದಿರದಲ್ಲಿ ಬುಧವಾರ ರಾತ್ರಿ ನಡೆಯಿತು.
ವರ್ಧಮಾನ ಸಾಹಿತ್ಯ ಪ್ರಶಸ್ತಿಯು ₹25 ಸಾವಿರ ಹಾಗೂ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯು ₹15 ಸಾವಿರ ನಗದು ಒಳಗೊಂಡಿದೆ.
ಸಮಾಜ ಮಂದಿರ ಸಭಾದ ಅಧ್ಯಕ್ಷ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು. ಪೀಠದ ಕಾರ್ಯಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಬಾಹುಬಲಿ ಪ್ರಸಾದ್, ಸಮಾಜ ಮಂದಿರ ಸಭಾದ ಕಾರ್ಯದರ್ಶಿ ಸುರೇಶ್ ಪ್ರಭು, ಪುಂಡಿಕಾಯ್ ಗಣಪಯ್ಯ ಭಟ್, ಗಣೇಶ್ ಕಾಮತ್ ಇದ್ದರು.
ಪೀಠದ ಪ್ರಧಾನ ನಿರ್ದೇಶಕ ಡಾ.ನಾ. ಮೊಗಸಾಲೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುನಿರಾಜ ರೆಂಜಾಳ ನಿರೂಪಿಸಿದರು. ಸದಾನಂದ ನಾರಾವಿ ಪ್ರಶಸ್ತಿ ಪತ್ರ ವಾಚಿಸಿದರು.