ಉಳ್ಳಾಲ: ಕಡಲ್ಕೊರೆತ ಬಗ್ಗೆ ಕೂಡಲೇ ಪರಿಶೀಲನೆ ನಡೆಸಬೇಕು ಎಂದು ಸ್ಪೀಕರ್ ಯು.ಟಿ.ಖಾದರ್ ಸೂಚನೆ ನೀಡಿರುವ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳು ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದರು.
ಅಪಾಯದಂಚಿನಲ್ಲಿರುವ ಭೀಪಾತುಮ್ಮ ಅವರನ್ನು ಬಾಡಿಗೆ ಮನೆಗೆ ಸ್ಥಳಾಂತರಿಸುವ ಅಧಿಕಾರಿಗಳ ನಿರ್ಧಾರಕ್ಕೆ ಬೀಪಾತುಮ ಕುಟುಂಬದವರು ಒಪ್ಪಿಕೊಂಡಿದ್ದಾರೆ. ಈ ಹಿಂದೆ ಸ್ಥಳಾಂತರ ಮಾಡಲು ಸೋಮೇಶ್ವರ ಪುರಸಭೆ ಕೈಗೊಂಡಿದ್ದ ನಿರ್ಧಾರಕ್ಕೆ ಬೀಪಾತುಮ ಕುಟುಂಬ ನಿರಾಕರಿಸಿತ್ತು.
ತಹಶೀಲ್ದಾರ್ ಪ್ರದೀಪ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಬೀಪಾತುಮ್ಮ ಅವರ ಮನೆ ಅಪಾಯದಲ್ಲಿ ಇರುವ ಕಾರಣ ಕಡಲ್ಕೊರೆತ ತಡೆಗೆ ಕಲ್ಲು ಹಾಕಲು ನಿರ್ಧರಿಸಿದ್ದು, ಈ ಬಗ್ಗೆ ಬಂದರು ಇಲಾಖೆಗೆ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ. ಶೀಘ್ರ ಕಡಲ್ಕೊರೆತ ತಡೆಗೆ ಕಾಮಗಾರಿ ನಡೆಸುವ ವ್ಯವಸ್ಥೆ ಆಗಲಿದೆ ಎಂದು ಭರವಸೆ ನೀಡಿದರು.
ಆಯಾ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಆಯಾ ಇಲಾಖಾಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಇತ್ಯರ್ಥ ಪಡಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ತಹಶೀಲ್ದಾರ್ ಪ್ರದೀಪ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತಾಡಿ, ಕಂದಾಯ ಅಧಿಕಾರಿ ಪ್ರಮೋದ್, ತಾ.ಪಂ.ಇ.ಒ.ಶೈಲಾ ಭಾಗವಹಿಸಿದ್ದರು.