ಮಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ತಾಲೂಕುಗಳಲ್ಲಿರುವ ಟಾಸ್ಕ್ಫೋರ್ಸ್ಗಳು ಕಾಲ ಕಾಲಕ್ಕೆ ಸಭೆ ನಡೆಸಿ, ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಯಾವುದೇ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೂರದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ತಕ್ಷಣದಿಂದಲೇ ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಕಾರ್ಯೋನ್ಮುಖವಾಗಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ನೀರಿನ ಕೊರತೆ ಇದೂವರೆಗೆ ಕಂಡುಬಂದಿಲ್ಲ. ಮುಂದೆಯೂ ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಆಸ್ಪತ್ರೆಗಳಲ್ಲಿ ಅವಘಡಗಳು ಸಂಭವಿಸಿದಾಗ ತಕ್ಷಣ ಪ್ರತಿಕ್ರಿಯಿಸಬೇಕು. ಅದಕ್ಕೆ ಪೂರ್ವಭಾವಿಯಾಗಿ ಅಣುಕು ಪ್ರದರ್ಶನಗಳನ್ನು ಮಾಡಬೇಕು. ಕಟ್ಟಡಗಳಲ್ಲಿ ಕೆಲಸ ಮಾಡುವಾಗ ಯಾವುದೇ ರೀತಿಯ ಅವಘಡಗಳು ಸಂಭವಿಸಿದಂತೆ ಸಂಬಂಧಿಸಿದವರು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಡಿಸಿಪಿ ದಿನೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೃಷ್ಣಮೂರ್ತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.