ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಸೋಂಕಿತರ ಸಂಖ್ಯೆ ಅಲ್ಪ ಇಳಿಕೆಯಾಗಿದೆ. ಸೋಮವಾರ ಜಿಲ್ಲೆಯಲ್ಲಿ 1,175 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 985 ಮಂದಿ ಸೋಮವಾರದಂದು ಗುಣಮುಖರಾಗಿದ್ದಾರೆ. ಮೃತಪಟ್ಟ ಐವರಿಗೆ ಕೋವಿಡ್–19 ಇರುವುದು ಸೋಮವಾರ ದೃಢವಾಗಿದೆ.
306 ವಾಹನ ವಶ: ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 23 ಪ್ರಕರಣ ದಾಖಲಿಸಲಾಗಿದ್ದು, 306 ವಾಹನಗಳನ್ನು ಸೋಮವಾರ ವಶಕ್ಕೆ ಪಡೆಯಲಾಗಿದೆ. 637 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ನಗರ ಕಮಿಷನರೇಟ್ ವ್ಯಾಪ್ತಿ ಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ಉಲ್ಲಂಘನೆ ಕಾಯ್ದೆಯಡಿ 22 ಪ್ರಕರಣ ದಾಖಲಾಗಿವೆ. 178 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಸ್ಕ್ ಉಲ್ಲಂಘನೆಯ 325 ಪ್ರಕರಣ ದಾಖಲಾಗಿವೆ.
ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ಉಲ್ಲಂಘನೆ ಕಾಯ್ದೆಯಡಿ ತಲಾ ಒಂದು ಪ್ರಕರಣ, ಮಾಸ್ಕ್ ನಿಯಮ ಉಲ್ಲಂಘನೆಯ 312 ಪ್ರಕರಣ ದಾಖಲಾಗಿದ್ದು, 128 ವಾಹನ ವಶಕ್ಕೆ ಪಡೆಯಲಾಗಿದೆ.
ಉಡುಪಿ: ಜಿಲ್ಲೆಯಲ್ಲಿ 855 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದ್ದು, 642 ಮಂದಿ ಗುಣಮುಖರಾಗಿದ್ದಾರೆ. ಮೃತ ಇಬ್ಬರಿಗೆ ಕೋವಿಡ್ ಇರುವುದು ಖಚಿತವಾಗಿದೆ.
ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 825 ಮಂದಿ ಗುಣಮುಖರಾಗಿದ್ದಾರೆ. ಸದ್ಯ 15,449 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 57,617 ಮಂದಿಗೆ ಸೋಂಕು ದೃಢಪಟ್ಟಿದ್ದು, 41,744 ಮಂದಿ ಗುಣಮುಖರಾಗಿದ್ದಾರೆ.
ಮಹಿಳೆಯ ಸಾವು: ವರದಿಗೆ ಆದೇಶ
ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮಹಿಳೆಯ ಕುಟುಂಬದವರು ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ಸಮಗ್ರ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ವರದಿ ಬಂದ ನಂತರ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.