ಬೆಳ್ತಂಗಡಿ : ‘ದೇಶದಲ್ಲಿ ಕರ್ನಾಟಕ ರಾಜ್ಯವೇ ಅತಿ ಹೆಚ್ಚು ಅರಣ್ಯ ಹೊಂದಿದೆ. ರಾಜ್ಯ 6.60 ಲಕ್ಷ ಹೆಕ್ಟೇರ್ ಪರಿಭಾವಿತ ಅರಣ್ಯ (ಡೀಮ್ಡ್ ಫಾರೆಸ್ಟ್) ಪ್ರದೇಶವನ್ನು ಡಿನೋಟಿಫಿಕೇಷನ್ ಮಾಡಿ ಕಂದಾಯ ಇಲಾಖೆಗೆ ನೀಡಿದ್ದು, ಅರಣ್ಯ ಇಲಾಖೆಯು 3.30 ಲಕ್ಷ ಹೆಕ್ಟೇರ್ನಲ್ಲಿ ಗಿಡ-ಮರಗಳನ್ನು ಬೆಳೆಸಲು ಯೋಜನೆ ರೂಪಿಸಿದೆ’ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ರಾಜ್ಯದಲ್ಲಿ ಹತ್ತು ಲಕ್ಷ ಹಣ್ಣಿನ ಗಿಡಗಳ ನಾಟಿ ಮಾಡುವ ಕಾರ್ಯಕ್ರಮಕ್ಕೆ ಗುರುವಾರ ತಾಲ್ಲೂಕಿನ ಬಡಕೋಡಿ ಗ್ರಾಮದ ಎರ್ಮೋಡಿ ಅರಣ್ಯ ಪ್ರದೇಶದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ‘ಬದುಕು ಮತ್ತು ಬದುಕಲು ಬಿಡು’ ಎಂಬುದು ಜೈನಧರ್ಮದ ಶ್ರೇಷ್ಠ ತತ್ವ. ಆದರೆ, ಪ್ರಾಣಿಗಳ ಮೊದಲ ಶತ್ರು ಮನುಷ್ಯನೇ ಆಗಿದ್ದಾನೆ. ಕಾಡಿನಲ್ಲಿ ಬೇಕಾದ ಆಹಾರ ಸಿಗದೆ ಅವುಗಳು ನಾಡಿಗೆ ಬರುತ್ತವೆ. ಕಾಡಿನಲ್ಲಿ ಹಣ್ಣಿನ ಗಿಡ-ಮರಗಳನ್ನು ಬೆಳೆಸಿ ಅವುಗಳ ಫಲಗಳನ್ನು ಪ್ರಾಣಿಗಳಿಗೆ ಬಿಟ್ಟು ಬಿಡಲಾಗುವುದು. ಇದರಿಂದ ಕೃಷಿಗೆ ಪ್ರಾಣಿಗಳ ಉಪಟಳ ತಪ್ಪುತ್ತದೆ’ ಎಂದರು
ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕೆಲಸ ಮಾಡುವುದರಿಂದ ಈ ಯೋಜನೆ ಯಶಸ್ವಿಯಾಗುತ್ತದೆ ಎಂದರು.
ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿದರು.
ಮಳವಳ್ಳಿಯ ರಮೇಶ್. ಕೆ. ಕೆರೆಗಳ ಹೂಳೆತ್ತಿದ ಕಾರಣ ಉಂಟಾದ ಪ್ರಯೋಜನವನ್ನು ವಿವರಿಸಿದರು.
ಶೀಲಾ ಉಮೇಶ್ ಕತ್ತಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನೆಟಲ್ಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಮುಖಂಡ ಜೀವಂಧರ ಕುಮಾರ್, ಹೊಸಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಸಂಪತ್ ಸಾಮ್ರಾಜ್ಯ ಶಿರ್ತಾಡಿ ಇದ್ದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜು ನಾಥ್ ಸ್ವಾಗತಿಸಿದರು. ನಿರ್ದೇಶಕ ಸತೀಶ್ ಶೆಟ್ಟಿ ವಂದಿಸಿದರು. ವಿವೇಕ್ ಪಾಯಸ್ ಮತ್ತು ಯಶವಂತ್ ಇದ್ದರು.