ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ 2ನೇ ತಿರುವಿನಲ್ಲಿ ಅನಿಲ ತುಂಬಿದ ಟ್ಯಾಂಕರ್ ಮಗುಚಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಸಕಲೇಶಪುರ ಠಾಣಾ ವ್ಯಾಪ್ತಿಯ ಶಿರಾಡಿ ಎರಡನೇ ತಿರುವಿನಲ್ಲಿ ಟ್ಯಾಂಕರ್ ಮಗುಚಿ ಬಿದ್ದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಅಡುಗೆ ಅನಿಲ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಬೆಳಿಗ್ಗೆ 10.30 ರ ವೇಳೆಗೆ ಉರುಳಿ ಬಿದ್ದಿದೆ. ಸದ್ಯ ಸಂಚಾರ ಸ್ಥಗಿತವಾಗಿದ್ದು, ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಅನಿಲ ಟ್ಯಾಂಕರ್ ನಲ್ಲಿ ಅನಿಲ ಸೋರಿಕೆಯಾಗಿದ್ದರಿಂದ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿ ಘಾಟ್ ಮೂಲಕ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಇದೀಗ ಈ ರಸ್ತೆಯು ಸಂಚಾರಕ್ಕೆ ಮುಕ್ತವಾಗಿದೆ ಎಂದು ಎಸ್ಪಿ ಲಕ್ಷ್ಮಿಪ್ರಸಾದ ತಿಳಿಸಿದ್ದಾರೆ.