ಸರ್ಕಾರದ ಖಜಾನೆ ಖಾಲಿ ಆಗಿರುವ ಆರೋಪ ಕುರಿತು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆರ್ಥಿಕ ಇಲಾಖೆಯ ಒಪ್ಪಿಗೆ ಇಲ್ಲದೆ, ವಿಧಾನ ಮಂಡಲದ ಅಂಗೀಕಾರ ಇಲ್ಲದೆ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ಅಧಿಕಾರದಿಂದ ಕೆಳಕ್ಕೆ ಇಳಿಯುವುದು ಖಚಿತವಾಗುತ್ತಿದ್ದಂತೆ ಮನಸೋ ಇಚ್ಛೆ ಮಂಜೂರಾತಿ ನೀಡಿ, ಆರ್ಥಿಕ ವ್ಯವಸ್ಥೆಯನ್ನು ಹಳಿತಪ್ಪಿಸಿದ್ದಾರೆ. ಈಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಆರೋಪ ಮಾಡುತ್ತಿದ್ದಾರೆ’ ಎಂದರು.