ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಚೆಗೆ ನಡೆದ ಮೂರು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಸಂದೇಶ ಪ್ರಕಟಿಸಿದ್ದನ್ನು ಪತ್ತೆ ಹಚ್ಚಿರುವ ಪೊಲೀಸರು ಇದುವರೆಗೆ ಇಂತಹ 17 ಸಂದೇಶಗಳ ವಿರುದ್ಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವ ಹಾಗೂ ಜನರಲ್ಲಿ ಭಯಭೀತಿ ಉಂಟು ಮಾಡುವ ಸಂದೇಶಗಳನ್ನು ಹಾಗೂ ಅಭಿಪ್ರಾಯಗಳನ್ನು ಕೆಲವರು ಹಂಚಿಕೊಂಡಿದ್ದರು. ಇಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೊಲೀಸ್ ಕಮಿಷನರೇಟ್ನ ಸಾಮಾಜಿಕ ಜಾಲತಾಣ ನಿಗಾ ವಿಭಾಗದವರು ಸೆನ್ ಠಾಣೆಗೆ ದೂರು ನೀಡಿದ್ದಾರೆ.