ಪುತ್ತೂರು: ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಬುಧವಾರ ಸಂಜೆ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಬಿರುಸಿನ ಗಾಳಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು.
ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂಬ್ರ -ಕೌಡಿಚ್ಚಾರು ನಡುವನ ಶೇಖಮಲೆ ಸಮೀಪದ ಮಡ್ಯಂಗಳದಲ್ಲಿ ಭಾರಿ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಉರುಳಿ ಬಿದ್ದಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಕೆಲ ಕಾಲ ಸ್ಥಗಿತಗೊಂಡಿತು.
ಮರವು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ವಿದ್ಯುತ್ ಕಂಬಗಳಿಗೆ ಹಾನಿಯುಂಟಾಯಿತು. ಪರಿಸರದಲ್ಲಿ ವಿದ್ಯುತ್ ಪೂರೈಕೆಯೂ ಸ್ಥಗಿತಗೊಂಡಿತು.
ಮೆಸ್ಕಾಂ ಸಿಬ್ಬಂದಿ ಹಾಗೂ ಸಂಪ್ಯ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದೊಂದಿಗೆ ಉರುಳಿದ ಮರವನ್ನು ಮತ್ತು ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಈಶ್ವರಮಂಗಲ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಲವಾರು ಕೃಷಿಕರ ತೋಟಗಳಲ್ಲಿ ಅಡಿಕೆ ಮರಗಳು ಧರೆಗುರುಳಿ, ನಷ್ಟ ಉಂಟಾಗಿದೆ. ಕೆದಂಬಾಡಿ ಗ್ರಾಮದ ತಿಂಗಳಾಡಿ, ಅರಿಯಡ್ಕ ಗ್ರಾಮದ ಶೇಖಮಲೆ, ಮಡ್ಯಂಗಳ, ಕಾವು -ಮಾಡನೂರು, ಪಡುವನ್ನೂರು ಗ್ರಾಮದ ಕುತ್ಯಾಳ ಪ್ರದೇಶಗಳಲ್ಲಿ ಗುಡುಗು, ಗಾಳಿಯೊಂದಿಗೆ ಮಳೆ ಸುರಿದಿದೆ.