ಮಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಕೋವಿಡ್ ಪತ್ತೆ ಪರೀಕ್ಷೆ ಹೆಚ್ಚಿಸ ಬೇಕು. ಸೋಂಕಿತರನ್ನು ಗುರುತಿಸಿ, ಚಿಕಿತ್ಸೆ ನೀಡಬೇಕು. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರನ್ನೂ ಪರೀಕ್ಷೆಗೆ ಒಳಪಡಿ ಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವತಃ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿರುವ ಅವರು ಉಡುಪಿಯ ಆದರ್ಶ ಆಸ್ಪತ್ರೆಯಿಂದ ಶುಕ್ರವಾರ ವಿಡಿಯೊ ಕಾನ್ಫ್ರೆನ್ಸ್ ಮೂಲಕ ಕೊರೊನಾ ವೈರಸ್ ಹರಡುವಿಕೆ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ನಾಲ್ಕೈದು ದಿನಗಳಿಂದ ನಿತ್ಯ 140 ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಜಿಲ್ಲೆಯಲ್ಲಿ ಎರಡನೇ ಅಲೆಯ ಆತಂಕ ಉಂಟು ಮಾಡಿದ್ದು, ಸೋಂಕಿನ ಪ್ರಮಾಣ ಇಳಿಸಲು ಕ್ರಮಕೈಗೊಳ್ಳಿ ಎಂದರು.
ಸಾರ್ವಜನಿಕರು ಮಾರ್ಗಸೂಚಿ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಲ್, ಪೆಟ್ರೋಲ್ ಬಂಕ್ ಮತ್ತಿತರ ವಾಣಿಜ್ಯ ಚಟುವಟಿಕೆದಾರರು ಗ್ರಾಹಕ ರಿಗೆ ಕೋವಿಡ್ ತಡೆ ಮಾರ್ಗಸೂಚಿ ಪಾಲಿಸುವಂತೆ ಎಚ್ಚರಿಸಬೇಕು. ರಾತ್ರಿ ಕರ್ಫ್ಯೂ ನಿಯಮ ಕಟ್ಟುನಿಟ್ಟಾಗಿ ಪಾಲನೆ ಯಾಗಬೇಕು. ಕೇರಳ ಗಡಿ ರಸ್ತೆಗಳಲ್ಲಿ ಕೋವಿಡ್ ತಪಾಸಣೆ, ನಿಯಂತ್ರಣ ಕ್ರಮ ಗಳನ್ನು ಬಿಗಿಗೊಳಿಸಬೇಕು ಎಂದರು.
ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಬಗ್ಗೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ನಿಗಾ ವಹಿಸಬೇಕು. ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಹೇಳಿದರು.
20 ದಿನದಲ್ಲಿ ಲಸಿಕೆ ಹಾಕಿ: ನಿರೋಧಕ ಶಕ್ತಿ ಹೆಚ್ಚಿಸಲು ಕೋವಿಡ್ ನಿರೋಧಕ ಲಸಿಕೆಯನ್ನು ಪಡೆಯಬೇಕು. ಜಿಲ್ಲೆಯಲ್ಲಿ 45 ದಾಟಿದ 4 ಲಕ್ಷ ಜನರಿದ್ದು, ಈ ವರೆಗೆ 50ಸಾವಿರ ಜನರಿ ಗೆಲಸಿಕೆ ನೀಡಲಾಗಿದೆ. 20 ದಿನಗಳ ಒಳಗಾಗಿ ಪ್ರತಿಯೊಬ್ಬರಿಗೂ ಚುಚ್ಚುಮದ್ದು ನೀಡಬೇಕು. ಸಂಘ ಸಂಸ್ಥೆಗಳು, ಯುವಕ ಮಂಡಲಗಳು, ಆಶಾ ಕಾರ್ಯಕರ್ತೆಯರ ಸಹಭಾಗಿತ್ವದಲ್ಲಿ ಆಗಬೇಕು ಎಂದರು.
ಪಾಸಿಟಿವ್ ವರದಿ ಬಂದ ಗರ್ಭಿಣಿಯರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವ್ಯವಸ್ಥೆ, ಡಯಾಲಿಸಿಸ್ ರೋಗಿ, ಇತರ ರೋಗಿಗಳ ಚಿಕಿತ್ಸೆಗೆ ತೊಂದರೆ ಆಗದಂತೆ ಎಚ್ಚರವಹಿಸಬೇಕು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕದ ಯೋಜನೆಯಡಿ ಚಿಕಿತ್ಸೆಯು ಎಲ್ಲ ಆಸ್ಪತ್ರೆಗಳಲ್ಲಿಯೂ ಲಭ್ಯವಿದ್ದು, ಜನರು ಸೌಲಭ್ಯ ಪಡೆಯಬೇಕು. ಆರೋಗ್ಯ ಮಿತ್ರರನ್ನು ಆಸ್ಪತ್ರೆಗಳಲ್ಲಿ ನೇಮಕ ಮಾಡಬೇಕು ಎಂದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಾನೆ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.