ಬೆಳ್ತಂಗಡಿ: ‘ಪಟ್ಟಣ ಪಂಚಾಯಿತಿ ಚುನಾವಣೆಯ ಎಲ್ಲಾ ವಾರ್ಡ್ಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.
ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ‘ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು ಪಟ್ಟಣ ಪಂಚಾಯಿತಿಯ 11 ಸ್ಥಾನಗಳೂ ಕೂಡ ಕಾಂಗ್ರೆಸ್ಗೆ ಲಭಿಸುವುದರಲ್ಲಿ ಅನುಮಾನವಿಲ್ಲ. ಕಳೆದ ಅವಧಿಯಲ್ಲಿ ಪಟ್ಟಣ ಪಂಚಾಯಿತಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳು, ಮಾಜಿ ಶಾಸಕ ವಸಂತ ಬಂಗೇರ ಮತ್ತು ಕಾಂಗ್ರೆಸ್ ಸರ್ಕಾರದ ಆಡಳಿತ ಎಲ್ಲವೂ ಈ ಚುನಾವಣೆಗೆ ಪೂರಕವಾಗುವುದು’ ಎಂದರು.
‘ಕಾಂಗ್ರೆಸ್ ಆಡಳಿತ ಗ್ರಾಮ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ ಪಕ್ಷವಾಗಿದೆ. ರಸ್ತೆ, ನೀರು, ಒಳಚರಂಡಿ ವ್ಯವಸ್ಥೆಗಳಿಗೆ ಹೆಚ್ಚು ಅನುದಾನ ನೀಡಿದೆ. ಗ್ರಾಮೀಣ ಅಭಿವೃದ್ಧಿಗೆ ಒತ್ತು ನೀಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವು ಆಗಬೇಕೇ ಹೊರತು, ಸುಳ್ಳನ್ನೇ ಬಂಡವಾಳವಾಗಿಸಿಕೊಂಡ ಬಿಜಿಪಿ ಪಕ್ಷ ಮತ್ತು ಅದರ ಅಭ್ಯರ್ಥಿಗಳದ್ದಲ್ಲ’ ಎಂದರು.
ಕೆಪಿಸಿಸಿ ಸದಸ್ಯ ರಾಮಚಂದ್ರ ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಶೇಖರ ಕುಕ್ಕೇಡಿ, ಮಾಜಿ ಸದಸ್ಯ ಶೈಲೇಶ್ ಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ದಿವ್ಯಜ್ಯೋತಿ, ಸದಸ್ಯ ಸೆಬಾಸ್ಟಿನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್, ನಗರ ಪಂಚಾಯಿತಿ ಅಭ್ಯರ್ಥಿಗಳು ಉಪಸ್ಥಿತರಿದ್ದರು.