ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದ ಮಸೀದಿ ಉದ್ಘಾಟನೆಗೆ ಶಾಲಾ ಮಕ್ಕಳನ್ನು ಕರೆದೊಯ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾರ ಮುಖ್ಯ ಶಿಕ್ಷಕರನ್ನು 10 ದಿನ ರಜೆ ಮೇಲೆ ಕಳುಹಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಸಲು ಸಮಗ್ರ ಶಿಕ್ಷಣದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗೆ ಸೂಚನೆ ನೀಡಲಾಗಿದೆ.
ಕೊಕ್ಕಡದಲ್ಲಿ ನವೀಕರಣಗೊಂಡ ಮಸೀದಿಯ ಉದ್ಘಾಟನೆ ಮಾ.19ರಂದು ನಡೆದಿತ್ತು. ಕಾರ್ಯಕ್ರಮಕ್ಕೆ ಕೊಕ್ಕಡ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶಿಕ್ಷಕರು ಕರೆದುಕೊಂಡು ಹೋಗಿದ್ದು, ಈ ಬಗ್ಗೆ ವಿವಾದ ಉಂಟಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.
‘ಶಾಲಾ ಅವಧಿಯಲ್ಲಿ ಮಾರ್ಗಸೂಚಿ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಮಸೀದಿ ಉದ್ಘಾಟನೆಗೆ ಕಳುಹಿಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕ ದಿನೇಶ್ ಅವರನ್ನು 10 ದಿನ ರಜೆಯ ಮೇಲೆ ಕಳುಹಿಸಲಾಗಿದೆ. ವಿಚಾರಣಾ ವರದಿ ಬಂದ ನಂತರ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ.