ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಇಲ್ಲಿಗೆ ಸಮೀಪದ ಕೈಕಂಬದ ಜಯಲಕ್ಷ್ಮಿ ಎಂಬವರ ಮನೆಯ ನಾಯಿಯನ್ನು ಹಿಡಿಯಲು ಬಂದ ಚಿರತೆ, ಹೆದರಿ ಓಡಿದ ನಾಯಿ ಜೊತೆಗೆ ಶೌಚಾಲಯದ ಒಳಗಡೆ ನುಗ್ಗಿತ್ತು. ಚಿರತೆಯನ್ನು ಗಮನಿಸಿದ ಮನೆಯವರು ಬಾಗಿಲು ಹಾಕಿದ್ದು, ಚಿರತೆ ಮತ್ತು ನಾಯಿ ಶೌಚಾಲಯದ ಒಳಗಡೆ ಬಂಧಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಅಲ್ಲಿನ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದರು. ತಕ್ಷಣ ಸ್ಥಳಕ್ಕೆ ಬಂದ ಸಿಬ್ಬಂದಿ ಅರಿವಳಿಕೆ ನೀಡಿ ಚಿರತೆಯನ್ನು ಹಿಡಿಯುವ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಚಿರತೆ ತಪ್ಪಿಸಿಕೊಂಡು ಪರಾರಿ ಆಗಿದೆ.
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಏರ್ ಗನ್ ಇದ್ದರೂ ಸರಿಯಾದ ರೀತಿಯಲ್ಲಿ ನಿರ್ವಹಿಸಲು ಅರಣ್ಯ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಸ್ಮೃತಿ ತಪ್ಪಿಸುವ ಔಷಧ ತುಂಬಿಸುವ ಬಗ್ಗೆ ಗೊಂದಲ ಉಂಟಾಗಿತ್ತು. ಸರಿಯಾದ ವ್ಯವಸ್ಥೆ ಇಲ್ಲದೇ ಚಿರತೆ ರಕ್ಷಣಾ ಕಾರ್ಯಾಚರಣೆ ಮಾಡಲಾಗಿದ್ದು, ಚಿರತೆ ಸಿಗದೇ ತಪ್ಪಿಸಿಕೊಂಡು ಓಡಿ ಹೋಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.