ಮಂಗಳೂರು: ನಗರದ ಹೊರವಲಯದ ಅಡ್ಯಾರ್ನಲ್ಲಿ ಶುಕ್ರವಾರ ತಡರಾತ್ರಿ ನಡೆದ ಮಾತಿನ ಚಕಮಕಿಯಲ್ಲಿ ಗುಂಪೊಂದು ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಡ್ಯಾರ್ ನಿವಾಸಿ, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಯಾಕೂಬ್ (36) ಕೊಲೆಯಾದ ವ್ಯಕ್ತಿ.
ಸ್ಥಳೀಯ ಹೆಂಗಸೊಬ್ಬರ ಮನೆಗೆ ವ್ಯಕ್ತಿಯೊಬ್ಬ ಆಗಾಗ ಬಂದು-ಹೋಗುತ್ತಿದ್ದ. ಇದನ್ನು ಯಾಕೂಬ್ ಪ್ರಶ್ನಿಸುತ್ತಿದ್ದರು. ಶುಕ್ರವಾರ ರಾತ್ರಿಯೂ ಇದು ಪುನರಾವರ್ತನೆ ಗೊಂಡಿದೆ. ರಿಟ್ಜ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಯಾಕೂಬ್ ಅವರಿಗೆ ಥಳಿಸುವುದರ ಜೊತೆಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ತೀವ್ರವಾಗಿ ಗಾಯಗೊಂಡಿದ್ದ ಯಾಕೂಬ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಶೋಧ ಆರಂಭಿಸಿದ್ದಾರೆ.