ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧ್ವಜ ಸಂಹಿತೆ ಪಾಲನೆಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚನೆ

Last Updated 11 ಆಗಸ್ಟ್ 2022, 16:12 IST
ಅಕ್ಷರ ಗಾತ್ರ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶ ಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದಲ್ಲಿ ಸರ್ಕಾರಿ ಕಟ್ಟಡಗಳ ಹಾಗೂ ಸಾರ್ವಜನಿಕರ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸುವಂತೆ ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರ್ದೇಶನ ಇಂತಿದೆ: ಜಿಲ್ಲೆಯ ಎಲ್ಲ ಸರ್ಕಾರಿ ಕಟ್ಟಡಗಳು, ಶಾಲೆ, ಕಾಲೇಜು ಹಾಗೂ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಕಟ್ಟಡಗಳಲ್ಲಿ ರಾಷ್ಟ್ರೀಯ ಧ್ವಜದ ತ್ರಿವರ್ಣ ಧ್ವಜವನ್ನು ಹಗಲಿನಲ್ಲಿ ಮಾತ್ರ ಹಾರಿಸಲು ಅನುಮತಿ ನೀಡಲಾಗಿದೆ. ಆ.13ರಿಂದ 15ರ ವರೆಗೆ ಪ್ರತಿದಿನ ಸೂರ್ಯೋದಯದ ನಂತರ ಬೆಳಿಗ್ಗೆ 8ರೊಳಗೆ ಧ್ವಜಾರೋಹಣ ಮಾಡುವುದು, ಹಾಗೆಯೇ ಸೂರ್ಯಾಸ್ತದ ವೇಳೆಗೆ ಇಳಿಸಬೇಕು. ಧ್ವಜ ಸಂಹಿತೆಯ ಯಾವುದೇ ಉಲ್ಲಂಘನೆಯಾಗದಂತೆ ಮತ್ತು ರಾಷ್ಟ್ರಧ್ವಜಕ್ಕೆ ಯಾವುದೇ ಅಗೌರವ ಉಂಟಾಗದಂತೆ ಜಾಗ್ರತೆ ವಹಿಸಬೇಕು.

ಜಿಲ್ಲೆಯ ಎಲ್ಲಾ ಮನೆಗಳ ಮೇಲೆ ಆ.13 ರಂದು ಸೂರ್ಯೋದಯದ ನಂತರ ಬೆಳಿಗ್ಗೆ 8 ಗಂಟೆಯೊಳಗೆ ಧ್ವಜಾರೋಹಣ ಮಾಡಿ ಹಾಗೂ ಹಗಲು ರಾತ್ರಿ ನಿರಂತರವಾಗಿ ಧ್ವಜ ಹಾರಿಸಿ ಆ.15ರ ಸೂರ್ಯಾಸ್ತದ ವೇಳೆಗೆ ಇಳಿಸುವಂತೆ ಸೂಚಿಸಿದೆ. ತ್ರಿವರ್ಣ ಧ್ವಜವನ್ನು ಏರಿಸುವಾಗ ಧ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸುತ್ತಾ, ಧ್ವಜವನ್ನು ಯಾವಾಗಲೂ ಪೂರ್ಣ ಗೌರವ ಮತ್ತು ಉತ್ಸಾಹದಿಂದ ಶೀಘ್ರಗತಿಯಲ್ಲಿ ಏರಿಸಿ, ನಿಧಾನವಾಗಿ ಕೆಳಕ್ಕೆ ಇಳಿಸಬೇಕು.

ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ಜನಗಣ ಮನವನ್ನು ಹಾಡಲೇಬೇಕು ಹಾಗೂ ರಾಷ್ಟ್ರ ಧ್ವಜವು ನೆಲ ಮುಟ್ಟದಂತೆ ಜಾಗ್ರತೆ ವಹಿಸಬೇಕು. ರಾಷ್ಟ್ರ ತ್ರಿವರ್ಣ ಧ್ವಜವನ್ನು ಹಾರಿಸುವ ಮುನ್ನ ಪರಿಶೀಲಿಸಿಕೊಳ್ಳಬೇಕು. ಹರಿದ ಅಥವಾ ಕೊಳಕಾದ ತ್ರಿವರ್ಣ ಧ್ವಜವನ್ನು ಹಾರಿಸುವಂತಿಲ್ಲ. ಹಾರಿಸಿದ ನಂತರ ಹರಿದಿದ್ದರೆ ಅಂತಹ ಧ್ವಜವನ್ನು ಕೂಡಲೇ ತೆಗೆಯಬೇಕು ಹಾಗೂ ರಾಷ್ಟ್ರಧ್ವಜಕ್ಕೆ ಸಮನಾದ ಅಥವಾ ಎತ್ತರದಲ್ಲಿ ಮತ್ತೊಂದು ಧ್ವಜವನ್ನು ಹಾರಿಸಬಾರದು. ಆ.13 ರಿಂದ 15ರವರೆಗೆ ಧ್ವಜಾರೋಹಣ ನಡೆಸಿ ಇಳಿಸಿದ ಬಳಿಕ ಧ್ವಜವನ್ನು ಜೋಪಾನವಾಗಿ ಮನೆಯಲ್ಲಿ ಇಟ್ಟುಕೊಳ್ಳಬೇಕು.

ಸಾರ್ವಜನಿಕ ಸ್ಥಳದಲ್ಲಿ ಅಥವಾ ಇತರೇ ಸ್ಥಳಗಳಲ್ಲಿ ರಾಷ್ಟ್ರಧ್ವಜವನ್ನು ಸುಡುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ ಹಾಗೂ ಮಾತು, ಬರಹ ಅಥವಾ ಇತರ ಕೃತ್ಯದ ಮೂಲಕ ಅಗೌರವ ತೋರಿದರೆ ಮತ್ತು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವುದು ಹಾಗೂ ಧ್ವಜ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸುವ ರೀತಿಯಲ್ಲಿ ಬಳಸುವುದು ಕಂಡುಬಂದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸುವ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT