ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಕುದ್ರೋಳಿಯಲ್ಲಿ 900 ಕೆ.ಜಿ ಧವಸ ಧಾನ್ಯದಿಂದ ತಿರಂಗಾ ಕಲಾಕೃತಿ ರಚನೆ

Last Updated 14 ಆಗಸ್ಟ್ 2022, 8:37 IST
ಅಕ್ಷರ ಗಾತ್ರ

ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಪ್ರಾಂಗಣದಲ್ಲಿ ಧವಸಧಾನ್ಯ ಮತ್ತು ಪುಷ್ಪಗಳಿಂದ ತಯಾರಿಸಿದ ತಿರಂಗಾ ಕಲಾಕೃತಿ ಎಲ್ಲರ ಗಮನ ಸೆಳೆಯುತ್ತಿದೆ.

‘ನಾವೆಲ್ಲರೂ ಒಂದೇ’ ಎನ್ನುವ ಸಂದೇಶ ಸಾರುವ ಹಿನ್ನೆಲೆಯಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಮತ್ತು ಗುರುಬೆಳದಿಂಗಳು ಫೌಂಡೇಷನ್ ವತಿಯಿಂದ ಸುಮಾರು 900 ಕೆ.ಜಿ ಧವಸ ಧಾನ್ಯಗಳನ್ನು ಬಳಸಿ ತಿರಂಗಾದ ವಿನ್ಯಾಸವನ್ನು ವಿಶಿಷ್ಟವಾಗಿ ಮಾಡಲಾಗಿದೆ.

ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ತಿರಂಗಾವನ್ನು ಉದ್ಘಾಟಿಸಿ, ಧವಸಧಾನ್ಯಗಳಿಂದ ತಯಾರಿಸಿದ ತಿರಂಗಾ ಅದ್ಭುತವಾಗಿ ಮೂಡಿಬಂದಿದೆ ಎಂದರು.

ಗುರು ಬೆಳದಿಂಗಳು ಫೌಂಡೇಷನ್‌ನ ಅಧ್ಯಕ್ಷ ಹಾಗೂ ಕುದ್ರೊಳಿ ಕ್ಷೇತ್ರದ ಕೋಶಾಧಿಕಾರಿ ಮಾತನಾಡಿ, ‘ಯಾವುದೇ ರಾಸಾಯನಿಕ ಬಳಸದೆ, ತರಕಾರಿ, ಧವಸಧಾನ್ಯಗಳನ್ನು ಉಪಯೋಗಿಸಿ ಚಿತ್ರಾಕೃತಿ ರಚಿಸಲಾಗಿದೆ. ಕೇಸರಿ ಬಣ್ಣಕ್ಕಾಗಿ 300 ಕೆಜಿ ಕೆಂಪು ತೊಗರಿ, ಬಿಳಿ ಬಣ್ಣಕ್ಕಾಗಿ 300 ಕೆ.ಜಿ ಸಾಗು, ಹಸಿರು ಬಣ್ಣಕ್ಕಾಗಿ 300 ಕೆಜಿ ಹೆಸರುಕಾಳು ಬಳಸಲಾಗಿದೆ.ಜೊತೆಗೆ ಬೆಂಡೆಕಾಯಿ, ಮೂಲಂಗಿ,ಕ್ಯಾರೆಟ್ ಮುಂತಾದ 100 ಕೆಜಿಯಷ್ಟು ತರಕಾರಿಗಳನ್ನೂ ಜೋಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಕಲಾವಿದ ಪುನೀಕ್ ಶೆಟ್ಟಿ ನೇತೃತ್ವದಲ್ಲಿ ಗುರುಬೆಳದಿಂಗಳು ಸಮಿತಿಯ ಮೂವತ್ತು ಸದಸ್ಯರು ಮತ್ತು ಕ್ಷೇತ್ರದ ಸಿಬ್ಬಂದಿ ಸೇರಿ ಸತತ 18 ಗಂಟೆ ಸಮಯದಲ್ಲಿ ಈ ಕಲಾಕೃತಿ ರಚಿಸಿದ್ದಾರೆ. 38 ಅಡಿಯ ವೃತ್ತದಲ್ಲಿ ವಿಶಿಷ್ಟ ಕಲಾಕೃತಿ ಮೂಡಿಬಂದಿದೆ. ಕಲಾಕೃತಿ ಸುತ್ತ ಸುಮಾರು 54 ಕಳಶವಿಟ್ಟು ಹೂಗಳಿಂದ ಅಲಂಕರಿಸಲಾಗಿದೆ ಎಂದು ತಿಳಿಸಿದರು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷೆ ಉರ್ಮೀಳಾ ರಮೇಶ್, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಮೊಂತೇರೊ, ಕಾರ್ಪೊರೇಟರ್ ಅನಿಲ್, ನಮ್ಮ ಕುಡ್ಲ ಚಾನಲ್ ನಿರ್ದೇಶಕ ಲೀಲಾಕ್ಷ ಕರ್ಕೇರಾ, ಕ್ಷೇತ್ರದ ಆಡಳಿತ ಸಮಿತಿ ಸದಸ್ಯೆ ಗೌರವಿ ಪಿ.ಕೆ, ಗುರುಬೆಳದಿಂಗಳು ಸದಸ್ಯರಾದ ಗಜೇಂದ್ರ ಪೂಜಾರಿ, ಅನಸೂಯ ಸಚಿನ್, ಪ್ರವೀಣ್ ಅಂಚನ್, ಪ್ರಮೋದ್ ಕೋಟ್ಯಾನ್, ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಚಿತ್ತರಂಜನ್ ಕಂಕನಾಡಿ ಗರೋಡಿ, ಶೈಲೇಂದ್ರ ವೈ. ಸುವರ್ಣ, ರವಿ ಪೂಜಾರಿ ಚಿಲಿಂಬಿ, ರಾಜೇಶ್ ಸುವರ್ಣ, ಪ್ರವೀಣ್ ಅಂಚನ್, ಜಯರಾಮ‌ ಕಾರಂದೂರು, ಕೃತಿನ್ ಧೀರಜ್ ಅಮೀನ್, ರಾಜೇಂದ್ರ ಚಿಲಿಂಬಿ, ನವೀನ್ ಸುವರ್ಣ, ಜಯಾನಂದ ಪೂಜಾರಿ, ಮ್ಯಾನೇಜರ್ ವಿನೀತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT