ಮಂಗಳೂರು: ಗೋಡೆಗಳಲ್ಲಿ ಉಗ್ರ ಪರ ಬರಹ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಶೀಘ್ರ ಆರೋಪಿಗಳ ಬಂಧನವಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಪಣಂಬೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ 1500ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು. ಕ್ಯಾಮರಾ ನೀಡಲು ದಾನಿಗಳು ಮುಂದೆ ಬಂದಲ್ಲಿ ಸ್ವಾಗತಿಸುತ್ತೇವೆ. ಕತ್ತಲೆ ಪ್ರದೇಶದಲ್ಲಿ ಬೀದಿ ದೀಪ, ಪೊಲೀಸ್ ಕಣ್ಗಾವಲು ಸಹಿತ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ ಎಂದರು.
ಇದನ್ನೂ ಓದಿ:ಮಂಗಳೂರು:ಉಗ್ರ ಸಂಘಟನೆ ಲಷ್ಕರ್ ಪರ ಗೋಡೆ ಬರಹ
ಅಂತರರಾಷ್ಟ್ರೀಯ ಉಗ್ರ ಸಂಘಟನೆಗಳು ಕಾಶ್ಮೀರ, ಇರಾಕ್ ಗಳಲ್ಲಿ ಬರೆಯುವಂತೆ ಮಂಗಳೂರಿನಲ್ಲಿ ಗೋಡೆ ಬರಹ ಬರೆಯುವ ಪ್ರಯತ್ನ ನಡೆದಿದೆ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.
ಒಬ್ಬನ ವಿಚಾರಣೆ: ನಗರದಲ್ಲಿ ಲಷ್ಕರ್ ಪರ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಜಿಲ್ಲೆಯ ನಝೀರ್ ಮಹಮ್ಮದ್ (26) ಎಂಬಾತನನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ದೃಢಪಡಿಸಿಲ್ಲ. ‘ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ. ಹಲವರ ವಿಚಾರಣೆ ನಡೆಯುತ್ತಿದೆ. ಆದರೆ, ಸೂಕ್ತ ಸಾಕ್ಷ್ಯಧಾರ ದೊರೆತ ಬಳಿಕ ದೃಢಪಡಿಸಬೇಕಾಗಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಕದ್ರಿ ಠಾಣಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈತ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದನು. ಮೊಬೈಲ್ ದಾಖಲೆ ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.