ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದ.ಕ | ಪ್ರಕೃತಿ ವಿಕೋಪ ಅನಾಹುತ ತಡೆಗೆ ಅಗತ್ಯ ಕ್ರಮವಹಿಸಿ: ಡಿ.ಸಿ

Published 14 ಮೇ 2024, 15:50 IST
Last Updated 14 ಮೇ 2024, 15:50 IST
ಅಕ್ಷರ ಗಾತ್ರ

ಮಂಗಳೂರು: ಪ್ರಕೃತಿ ವಿಕೋಪದಿಂದ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ನಿಗಾವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಕುಡಿಯುವ ನೀರು ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಮುಂಬರುವ ಸಮಸ್ಯೆಗಳ ಬಗ್ಗೆ, ಕಂಡುಕೊಳ್ಳಬೇಕಾದ ಪರಿಹಾರಗಳ ಬಗ್ಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ವಾಟ್ಸ್‌ಆ್ಯಪ್‍ ಗ್ರೂಪ್‌ ರಚಿಸಿಕೊಂಡು, ದಿನದ 24 ಗಂಟೆಯೂ ವಾಟ್ಸಾಆ್ಯಪ್‍ ಗ್ರೂಪ್‌ ವೀಕ್ಷಿಸುವ ಸಿಬ್ಬಂದಿಯನ್ನು ಗ್ರೂಪ್‍ನಲ್ಲಿ ನಿಯೋಜಿಸಬೇಕು ಎಂದು ಸೂಚಿಸಿದರು.

ನಗರ, ಗ್ರಾಮೀಣ ಭಾಗದಲ್ಲಿ ಮಳೆಯಿಂದ ಸಮಸ್ಯೆಗಳು ಉಂಟಾದಲ್ಲಿ ಮೆಸ್ಕಾಂ ತ್ವರಿತವಾಗಿ ಕಾರ್ಯ ಪ್ರವೃತ್ತವಾಗಬೇಕು. ವಿದ್ಯುತ್ ಸಮಸ್ಯೆಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಸಿಬ್ಬಂದಿ ನಿಯೋಜಿಸಬೇಕು. ವಿದ್ಯುತ್ ಸಮಸ್ಯೆ ಉಂಟಾದ 6 ಗಂಟೆಯೊಳಗೆ ಪರಿಹಾರ ಒದಗಿಸಬೇಕು. ಕಂಟ್ರೋಲ್‍ರೂಂ ತೆರೆಯಬೇಕು. ಮಲೆನಾಡು ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಬಗ್ಗೆ ಹೆಚ್ಚಿನ ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಕೆಲವು ಕಡೆಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಅನವಶ್ಯಕ ಉದ್ದೇಶಗಳಿಗೆ ನೀರು ಪೋಲಾಗುವುದನ್ನು ತಪ್ಪಿಸಲು ಕ್ರಮವಹಿಸಿ ಅಂತವರಿಗೆ ದಂಡ ವಿಧಿಸಬೇಕು. ಟ್ಯಾಂಕರ್‌ಗಳಿಂದ ಸರಬರಾಜಾಗುತ್ತಿರುವ ನೀರು, ನೀರಿನ ಮೂಲ ಶುದ್ಧವಾಗಿದೆ ಎಂಬುದನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಿಸಲು ಕ್ರಮವಹಿಸಬೇಕು ಎಂದು ನಿರ್ದೇಶಿಸಿದರು.

ಮುಂಗಾರು ಪೂರ್ವದಲ್ಲಿಯೇ ಡಂಪಿಂಗ್ ಯಾರ್ಡ್, ಕಸ ವಿಲೇವಾರಿ ಪ್ರದೇಶಗಳನ್ನು ಸ್ವಚ್ಛಗೊಳಿಸಬೇಕು. ಇಂತಹ ಪ್ರದೇಶಗಳಲ್ಲಿ ನೆರೆ ಉಂಟಾಗದಂತೆ ಮುಂಜಾಗ್ರತ ಕ್ರಮ ವಹಿಸಬೇಕು. ಅಧಿಕಾರಿಗಳು ಅಂತಹ ಪ್ರದೇಶಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು ಎಂದರು.

ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವುದರ ಜೊತೆಗೆ ಮಳೆಯಿಂದ ಹಾನಿ ಪ್ರದೇಶದಲ್ಲಿ ಚಿಕಿತ್ಸೆ ಒದಗಿಸಲು ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಜಂಟಿಯಾಗಿ ಮರದ ರೆಂಬೆ ಕೊಂಬೆ ವಿದ್ಯುತ್ ತಂತಿಗಳಿಗೆ ತಗುಲಿ ಉಂಟಾಗುವ ಅಪಾಯವನ್ನು ತಡೆಯಲು ಕೂಡಲೇ ರೆಂಬೆಕೊಂಬೆಗಳನ್ನು ಕತ್ತರಿಸಬೇಕು. ಮರ ಬಿದ್ದು ರಸ್ತೆ ಬ್ಲಾಕ್ ಆದ ಸಂದರ್ಭದಲ್ಲಿ ಕೂಡಲೇ ಬದಲಿರಸ್ತೆ ವ್ಯವಸ್ಥೆ ಮಾಡಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ ಅಗ್ನಿಶಾಮಕ ದಳದಿಂದ ಸಿಬ್ಬಂದಿ ನಿಯೋಜಿಸಬೇಕು. ಸ್ಥಳೀಯ ಜೆಸಿಬಿ, ಹಿಟಾಚಿಗಳ ಮಾಲಿಕರೊಂದಿಗೆ ಸಂಪರ್ಕ ಇಟ್ಟುಕೊಂಡು ವಿಪತ್ತಿನ ಸಮಯದಲ್ಲಿ ಲಭ್ಯರಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ರಾಜಕಾಲುವೆಗಳ ಹೂಳೆತ್ತಬೇಕು, ಕೊಟ್ಟಾರಚೌಕಿ, ಪಂಪ್‍ವೆಲ್‌ ಮುಂತಾದ ಪ್ರದೇಶದಲ್ಲಿ ನೆರೆ ಸಂಭವಿಸದಂತೆ ಅಧಿಕಾರಿಗಳು ಭೇಟಿ ನೀಡಿ ಮುಂಜಾಗ್ರತ ಕ್ರಮ ತೆಗೆದುಕೊಲ್ಳಬೇಕು. ಚಾರ್ಮಾಡಿ ಘಾಟಿ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಪ್ರದೇಶಗಳನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಪಟ್ಟಿ ಮಾಡಬೇಕು. ಭೂಕುಸಿತ ಉಂಟಾದ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಅಗತ್ಯ ಸಿಬ್ಬಂದಿ ನಿಯೋಜಿಸಬೇಕು. ಘಾಟಿ ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಅಡೆತಡೆ ಉಂಟಾದ ಬಗ್ಗೆ ಗೂಗಲ್ ಮುಖಾಂತರ ಜನರಿಗೆ ಮಾಹಿತಿ ತಲುಪಿಸುವ ವ್ಯವಸ್ಥೆ ಆಗಬೇಕು ಎಂದು ಸೂಚಿಸಿದರು.

ಮಳೆ ಸಂದರ್ಭ ಅಪಾಯ ಸ್ಥಳದಲ್ಲಿರುವ ಅಂಗನವಾಡಿ, ಶಾಲೆಗಳಿಗೆ ಅಧಿಕಾರಿಗಳು ಭೇಟಿ ನೀಡಬೇಕು. ಶಿಥಿಲಗೊಂಡ ಶಾಲಾ ಕಟ್ಟಡಗಳ ಬಗ್ಗೆ ಗಮನಹರಿಸಿ ಹಾನಿಯಾಗದಂತೆ ಕ್ರಮ ಕೈಗೊಳ್ಳಬೇಕು. ಅಂತಹ ಕಟ್ಟಡಗಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಮೀನುಗಾರರಿಗೆ ಜಾಗ್ರತ ಕ್ರಮಗಳ ಸಭೆ ನಡೆಸಬೇಕು. ಮೀನುಗಾರಿಕೆ ಇಲಾಖೆ ಅಧಿಕಾರಿಗಳ ಮುಂದಾಳತ್ವದಲ್ಲಿ ಅಪಾಯಕ್ಕೆ ಸಿಲುಕಿದ ಮೀನುಗಾರರನ್ನು ರಕ್ಷಿಸಲು ತಂಡ ಸಿದ್ಧಪಡಿಸಬೇಕು. ಮೀನುಗಾರರಿಗೆ ವಾಟ್ಸ್‌ಆ್ಯಪ್‌ ಗ್ರೂಪ್‌ಗಳನ್ನು ರಚಿಸಿ ಮಾಹಿತಿ ರವಾನಿಸುವ ಕೆಲಸ ಮಾಡಬೇಕು ಎಂದು ಮೀನುಗಾರಿಕಾ ಇಲಾಖೆಗೆ ಸೂಚಿಸಿದರು.

ಇತ್ತೀಚಿನ ದಿನಗಳಲ್ಲಿ ಪ್ರವಾಸದ ಸಂದರ್ಭದಲ್ಲಿ ಯುವಜನರು ಸಮುದ್ರದಲ್ಲಿ ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಸಾಕಷ್ಟು ನಡೆಯುತ್ತಿರುವುದರಿಂದ ಇಂತಹ ಸಮಸ್ಯೆಗಳು ಎದುರಾಗದಂತೆ ಗೃಹ ರಕ್ಷಣಾದಳದ ಸಿಬ್ಬಂದಿ ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್‌ ಸಿ.ಬಿ., ಪಾಲಿಕೆ ಆಯುಕ್ತ ಆನಂದ್, ಡಿಸಿಪಿ ಸಿದ್ದಾರ್ಥ್ ಗೋಯಲ್, ಡಿಸಿಎಫ್ ಆ್ಯಂಟನಿ, ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೋಹಪಾತ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT