ಮಂಗಳೂರು: ಮದುವೆ ಪಾರ್ಟಿ ನಡೆಯುತ್ತಿದ್ದ ನಗರ ಹೊರವಲಯದ ಕುಳಾಯಿ ಬೀಚ್ ರೆಸಾರ್ಟ್ ಮೇಲೆ ಮಂಗಳವಾರ ದಾಳಿ ನಡೆಸಿರುವ ಅಧಿಕಾರಿಗಳು, ಕೋವಿಡ್ ನಿಯಮ ಉಲ್ಲಂಘಿಸಿರುವ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ರೆಸಾರ್ಟ್ನಲ್ಲಿ ಮಂಗಳವಾರ ಸಂಜೆ ಮದುವೆ ಪಾರ್ಟಿ ಆಯೋಜಿಸಲಾಗಿತ್ತು. ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಹೆಚ್ಚಿನ ಜನ ಸೇರಿಸಿದ್ದರು. ಡಿಜೆ, ಮದ್ಯ ಪಾನದ ವ್ಯವಸ್ಥೆ ಮಾಡಲಾಗಿತ್ತು ಎಂದು ದೂರಲಾಗಿದೆ.
ಉಪ ವಿಭಾಗಾಧಿಕಾರಿ ಮದನ್ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಕಾರ್ಯಕ್ರಮ ಆಯೋಜಕರು ಹಾಗೂ ರೆಸಾರ್ಟ್ ಮಾಲೀಕರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.