ಮಂಗಳೂರು: ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಮೆಸ್ಕಾಂ ವ್ಯಾಪ್ತಿ ಯಲ್ಲಿ ಈ ಬಾರಿಯ ಮಳೆಗಾಲದ ಆರಂಭದಿಂದ ಇದುವರೆಗೆ ವಿವಿಧ ಕಾರಣಗಳಿಂದ ಸುಮಾರು ₹12.2 ಕೋಟಿ ಹಾನಿ ಸಂಭವಿಸಿದೆ ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸ್ನೇಹಲ್ ಆರ್. ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸಂವಾದ ಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ಡೌನ್ ಕಾರಣದಿಂದ ವಾಣಿಜ್ಯ ಬಳಕೆಯ ವಿದ್ಯುತ್ ಉಪಯೋಗದಲ್ಲಿ ಶೇ 60 ಕಡಿತವಾಗಿದ್ದು, ಇತರ ಕ್ಷೇತ್ರಗಳಲ್ಲಿ ವಿದ್ಯುತ್ ಬಳಕೆಯಲ್ಲಿ ಶೇ 30ರಷ್ಟು ಹೆಚ್ಚಿದೆ ಎಂದರು.
ರಾಜ್ಯದ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಶೇ 8ರಷ್ಟು ವಿದ್ಯುತ್ ಅಂದರೆ, ಮೆಸ್ಕಾಂ ವ್ಯಾಪ್ತಿಯಲ್ಲಿ ನಿತ್ಯ 1.5 ಕೋಟಿ ಯುನಿಟ್ ವಿದ್ಯುತ್ ಬಳಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆಯನ್ನು ನೀಡಲು ಮೆಸ್ಕಾಂ ಬಯಸುತ್ತದೆ. ಡಿಜಿಟಲ್ ಮೀಟರ್ ಬಳಕೆ ಸೇರಿದಂತೆ ಗುಣಮಟ್ಟದ ಗ್ರಾಹಕ ಸೇವೆಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಹೇಳಿದರು.
65 ವಿದ್ಯುತ್ ಅವಘಡ: ಕಳೆದ ವರ್ಷ ಸುಮಾರು 65 ವಿದ್ಯುತ್ ಅಪಘಡಗಳು ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇಂತಹ ಅವಘಡಗಳನ್ನು ತಪ್ಪಿಸುವ ದೃಷ್ಟಿಯಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮಳೆಗಾಲದಲ್ಲಿ ವಿದ್ಯುತ್ ತಂತಿ ಕೆಳಗಿನ ಮರಗಳ ಕೊಂಬೆ ಸವರುವ ಕೆಲಸ, ಪರಿವರ್ತಕಗಳ ದುರಸ್ತಿ ಕೆಲಸಗಳನ್ನು ಶೇ 85ರಿಂದ ಶೇ 95 ರಷ್ಟು ಪೂರ್ಣಗೊಳಿಸಲಾಗಿದೆ. ಗ್ರಾಹಕರ ಸಾಕಷ್ಟು ಕರೆಗಳಿಗೆ ಸೂಕ್ತವಾಗಿ ಸ್ಪಂದಿಸಲಾಗುತ್ತಿದೆ ಎಂದು ಹೇಳಿದರು.
ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮೆಸ್ಕಾಂ ತಾಂತ್ರಿಕ ನಿರ್ದೇಶಕಿ ಪದ್ಮಾವತಿ, ಮುಖ್ಯ ಎಂಜಿನಿಯರ್ ಮಂಜಪ್ಪ, ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಇದ್ದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ವಂದಿಸಿದರು.