ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಲಿಕುಳದ ಅಭಿವೃದ್ಧಿಗೆ ಅಗತ್ಯ ಕ್ರಮ: ಸಚಿವ ಅರವಿಂದ ಲಿಂಬಾವಳಿ

Last Updated 9 ಜುಲೈ 2021, 14:00 IST
ಅಕ್ಷರ ಗಾತ್ರ

ಮಂಗಳೂರು: ಪಿಲಿಕುಳ ನಿಸರ್ಗಧಾಮದ ಸುಧಾರಣೆಗೆ ಕೇಂದ್ರ ಸಚಿವರು ಹಾಗೂ ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಅರಣ್ಯ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಶುಕ್ರವಾರ ಇಲ್ಲಿನ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ನೀಡಿ, ಪಿಲಿಕುಳದ ಮೃಗಾಯಲವನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಪಿಲಿಕುಳದಲ್ಲಿರುವ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳ ತಂಡದೊಂದಿಗೆ ಪರಿಶೀಲಿಸಲಾಗಿದೆ. ಇಲ್ಲಿ ಪ್ರಾಣಿಗಳನ್ನು ಸ್ಪಚ್ಛಂದ ವಾತಾವರಣದಲ್ಲಿ ಇರಿಸಿರುವುದು ಅತಿ ಪ್ರಮುಖವಾದ ವಿಷಯ. ಉತ್ತಮ ವಾತಾವರಣದಲ್ಲಿ ಇರುವ ಪಿಲಿಕುಳ ನಿಸರ್ಗಧಾಮಕ್ಕೆ ಮುಂಬರುವ ದಿನಗಳಲ್ಲಿ ಅರಣ್ಯ ಇಲಾಖೆ ವತಿಯಿಂದ ಮತ್ತಷ್ಟು ಸುಧಾರಣೆಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಇತ್ತೀಚೆಗೆ ಅವರು ಕೇಂದ್ರ ಅರಣ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಭೂಪೇಂದ್ರ ಯಾದವ್ ಅವರೊಂದಿಗೆ ಚರ್ಚಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಈ ನಿಸರ್ಗಧಾಮದ ಅಭಿವೃದ್ಧಿಗೆ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಲು ಚಿಂತಿಸಲಾಗಿದೆ ಎಂದು ತಿಳಿಸಿದರು.

ಅರಣ್ಯ ಹಕ್ಕು ಕಾಯ್ದೆ:

ಅರಣ್ಯ ಹಕ್ಕು ಕಾಯ್ದೆಯಡಿ ನಗರ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಲು ಸಿದ್ಧವಿರುವ ಬುಡಕಟ್ಟು ಜನಾಂಗದವರನ್ನು ಅವರ ಒಪ್ಪಿಗೆ ಮೇರೆಗೆ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಬಹುದಿನಗಳಿಂದ ಅರಣ್ಯದಲ್ಲಿಯೇ ವಾಸ ಇರುವವರು ಅಲ್ಲಿಯೇ ಇರಲು ಇಚ್ಛಿಸಿದಲ್ಲಿ ಅರಣ್ಯ ಪ್ರದೇಶಗಳಲ್ಲಿಯೇ ಅಗತ್ಯ ಮೂಲಸೌಕರ್ಯಗಳನ್ನು ಅಧಿಕಾರಿಗಳು ಒದಗಿಸುತ್ತಿದ್ದಾರೆ ಎಂದು ಹೇಳಿದರು.

ಶಾಸಕ ಉಮಾನಾಥ್ ಕೋಟ್ಯಾನ್, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವೆಂಕಟೇಶ್ ಜಿ.ಎಸ್., ನಿರ್ದೇಶಕ ಜಯಪ್ರಕಾಶ್ ಭಂಡಾರಿ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ.ವಿ.ರಾವ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್‌, ಬಿಸಿಎಫ್ ಡಾ.ಕರಿಕಾಳನ್, ಎಸಿಎಫ್ ಸುಬ್ರಹ್ಮಣ್ಯ, ವಲಯ ಅರಣ್ಯಾಧಿಕಾರಿ ಶ್ರೀಧರ್ ಇದ್ದರು.

‘ತುಳು: 8ನೇ ಪರಿಚ್ಛೇದ ಸೇರ್ಪಡೆ ಸನ್ನಿಹಿತ’

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವ ಕುರಿತು ಪ್ರತಿಕ್ರಿಯಿಸಿದ ಸಚಿವ ಅರವಿಂದ ಲಿಂಬಾವಳಿ, ‘ಕೇಂದ್ರ ಸರ್ಕಾರವು ಈ ಕುರಿತಂತೆ ಸೂಕ್ತ ಕ್ರಮದಲ್ಲಿ ಪರಿಶೀಲಿಸಿ ಕಳುಹಿಸುವಂತೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಸಭೆ ನಡೆಸಿ, ಸೂಕ್ತವಾದ ಪ್ರಕ್ರಿಯೆಯಲ್ಲಿ ಮತ್ತೆ ಕೇಂದ್ರಕ್ಕೆ ಸಲ್ಲಿಸಲಾಗಿದ್ದು, ಕೂಡಲೇ ಒಪ್ಪಿಗೆ ದೊರೆಯುವ ಸಾಧ್ಯತೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT