ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ಟಾಟಾ ಕೋವಿಡ್ ಆಸ್ಪತ್ರೆ ಉದ್ಘಾಟನೆ ಆಗಿ ಒಂದು ತಿಂಗಳು ಕಳೆದರೂ ಇನ್ನೂ ಕಾರ್ಯಾರಂಭ ಮಾಡಿಲ್ಲ. ಕೂಡಲೇ ಆಸ್ಪತ್ರೆ ಕಾರ್ಯಾರಂಭ ಮಾಡುವಂತೆ ಒತ್ತಾಯಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಎಚ್ಚರಿಕೆ ನೀಡಿದ್ದಾರೆ.
ಕೇರಳ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಕಾಞಂಗಾಡಿನ ಮೈದಂಪ ಮೈದಾನದಲ್ಲಿ ಸತ್ಯಾಗ್ರಹ ಆರಂಭಿಸಲಾಗುವುದು. ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಆನ್ಲೈನ್ ಮೂಲಕ ಸತ್ಯಾಗ್ರಹ ಉದ್ಘಾಟಿಸುವರು ಎಂದು ತಿಳಿಸಿದ್ದಾರೆ.
ಸುಮಾರು 541 ಹಾಸಿಗೆಯ ಆಸ್ಪತ್ರೆಗೆ ವೈದ್ಯರು, ಸಿಬ್ಬಂದಿಯನ್ನು ನಿಯೋಜಿಸಿಲ್ಲ. ಮೂಲಸೌಲಭ್ಯಗಳ ಕೊರತೆ ಇದ್ದು, ಒಂದು ಕಡೆ ಕೋವಿಡ್–19 ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದರೂ, ಆಸ್ಪತ್ರೆ ಪುನರಾರಂಭ ಮಾಡದಿರುವುದೇ ಪ್ರತಿಭಟನೆಗೆ ಕಾರಣ ಎಂದು ತಿಳಿಸಿದ್ದಾರೆ.