ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಚುನಾಯಿತ ಪ್ರತಿನಿಧಿಗಳು, ಶಾಸಕರು ಮತ್ತು ಸಂಸದರು ಸಹಕಾರ ಬ್ಯಾಂಕ್ಗಳ ಆಡಳಿತ ಮಂಡಳಿಯ ನಿರ್ದೇಶಕರಾಗಲು ಅನರ್ಹರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ವಿಚಾರ ಸತ್ಯಕ್ಕೆ ದೂರವಾಗಿದೆ. ಆರ್ಬಿಐ ಈ ಸುತ್ತೋಲೆಯು ಸಹಕಾರ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕರ ಕುರಿತದ್ದಾಗಿದೆ. ಬೇರೆ ಬೇರೆ ಸಹಕಾರ ಬ್ಯಾಂಕ್ಗಳಲ್ಲಿ ಕಾರ್ಯದರ್ಶಿ, ಪ್ರಧಾನ ವ್ಯವಸ್ಥಾಪಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಇತ್ಯಾದಿ ಹುದ್ದೆಗಳಲ್ಲಿರುವ ಬ್ಯಾಂಕ್ನ ಅಧಿಕಾರಿಯನ್ನು ಇನ್ನು ಮುಂದೆ ವ್ಯವಸ್ಥಾಪಕ ನಿರ್ದೇಶಕರು ಎಂದು ಕರೆಯಲು ಅದು ಸೂಚಿಸಿದೆ. ಈ ಬಗ್ಗೆ ಈಗಾಗಲೇ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅನುಭವಗಳ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಇದರ ಅಡಿಯಲ್ಲಿ ಬರದೇ ಇರುವ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ಬದಲಾವಣೆ ಮಾಡಿ, ವಿದ್ಯಾರ್ಹತೆ ಹೊಂದಿರುವವರಿಗೆ ಬದಲಾವಣೆ ಮಾಡಲು ಅಥವಾ ಸಂಸ್ಥೆಯ ಹೊರಗಿನಿಂದ ಪಡೆದುಕೊಳ್ಳಲು ಅವಕಾಶ ಮಾಡಿಕೊಡುವಂತೆ ಆರ್ಬಿಐ ಎಲ್ಲ ಸಹಕಾರ ಬ್ಯಾಂಕ್ಗಳ ಆಡಳಿತ ಮಂಡಳಿಗೆ ಸೂಚಿಸಿ, ಸುತ್ತೋಲೆಯನ್ನು ಹೊರಡಿಸಿದೆ’ ಎಂದು ಅವರು ವಿವರಿಸಿದ್ದಾರೆ.