ಸುಳ್ಯ: ಸರ್ಕಾರಿ ಸ್ವಾಮ್ಯದ ಹಲವು ಸಂಸ್ಥೆಗಳನ್ನು ಖಾಸಗೀಕರಣ ಮಾಡಿರುವ ಕೇಂದ್ರ ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಕೂಡ ಖಾಸಗೀಕರಣ ಮಾಡಲು ಹೊರಟಿದೆ. ಇದರ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ಜನಾಂದೋಲನ ರೂಪಿಸಲಾಗುವುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಇಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದೆ ದೇಶದ ಜನರಿಗೆ ಅನುಕೂಲ ಆಗಲೆಂದು ಇಂದಿರಾಗಾಂಧಿ ಎಲ್ಲ ಸಂಸ್ಥೆಗಳನ್ನು ರಾಷ್ಟ್ರೀಕರಣ ಮಾಡಿದರು. ಆದರೆ ಮೋದಿ ಸರ್ಕಾರ ರೈಲ್ವೆ, ವಿಮಾನ ನಿಲ್ದಾಣ ಸೇರಿ ಎಲ್ಲವನ್ನೂ ಖಾಸಗೀಕರಣ ಮಾಡುತ್ತಿದೆ. ವಿದ್ಯುತ್ ಕ್ಷೇತ್ರವನ್ನು ಕೂಡ ಖಾಸಗೀಕರಣ ಮಾಡಿದರೆ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ವಿದ್ಯುತ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಮಂದಿ ಕೆಲಸ ಕಳೆದುಕೊಂಡು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಉಚಿತ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದ ಪಂಪ್ಸೆಟ್ ಹೊಂದಿದ 33 ಲಕ್ಷ ಕೃಷಿಕರಿಗೆ ಈ ಸೌಲಭ್ಯ ಕಡಿತಗೊಳ್ಳಲಿದೆ’ ಎಂದರು.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ, ಡಿಸಿಸಿ ಉಪಾಧ್ಯಕ್ಷ ಪಿ.ಎಸ್.ಗಂಗಾಧರ, ಪ್ರಮುಖರಾದ ಕೆ. ಗೋಕುಲ್ ದಾಸ್, ಸುರೇಶ್ ಅಮೈ, ನಂದರಾಜ ಸಂಕೇಶ, ಭವಾನಿಶಂಕರ ಕಲ್ಮಡ್ಕ ಇದ್ದರು.