ಮಂಗಳೂರು: ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ ಶ್ರೀಧರ್ ವಿನಂತಿಸಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ಪ್ರಾದೇಶಿಕ ಕಚೇರಿ, ಮಹಾನಗರ ಪಾಲಿಕೆ ಹಾಗೂ ಮಂಗಳೂರು ವಿಶೇಷ ಆರ್ಥಿಕ ವಲಯ ಆಶ್ರಯದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತಂತೆ ಮಂಗಳೂರು ವಿಶೇಷ ಆರ್ಥಿಕ ವಲಯದ ಕಚೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರದ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜ್ಞಾನಿ ಪಿ.ಕೆ. ಸೆಲ್ವಿ, ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಬಳಕೆ ಹಾಗೂ ಸಂಗ್ರಹಣೆಯ ಪ್ರಸ್ತುತ ಸ್ಥಿತಿಗತಿ ಹಾಗೂ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕಾಯ್ದೆ ಕುರಿತು ಮಾಹಿತಿ ನೀಡಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಕೀರ್ತಿ ಕುಮಾರ್ ಹಾಗೂ ಮಂಗಳೂರು ವಿಶೇಷ ಆರ್ಥಿಕ ವಲಯದ ಕಾರ್ಯನಿರ್ವಾಹಕ ಅಧಿಕಾರಿ ಪಿ. ಸೂರ್ಯನಾರಾಯಣ ಮಾತನಾಡಿದರು.