ಬೆಳ್ತಂಗಡಿ : ‘ರಾಜ್ಯದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಗೆ(ಎಪಿಎಂಸಿ) ಕಾಯಕಲ್ಪ ನೀಡಲು ಮುಂದಾಗಿದ್ದು, ರೈತರಿಗೆ ಇನ್ನಷ್ಟು ನೆರವಾಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದುಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.
ಬೆಳ್ತಂಗಡಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಿದ ಬಳಿಕ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.
‘ನೆರೆಪೀಡಿತ ಪ್ರದೇಶದ ರೈತರ ಅಲ್ಪಾವಧಿ ಸಾಲವನ್ನು ದೀರ್ಘಾವಧಿ ಸಾಲವನ್ನಾಗಿ ಮಾಡುವ ಬಗ್ಗೆ ಚಿಂತಿಸಲಾಗುವುದು. ರೈತರ ಅನುಕೂಲಕ್ಕಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಸಹಕಾರಿ ಕ್ಷೇತ್ರಗಳಲ್ಲಿ ವಿಶೇಷ ಅಭಿವೃದ್ಧಿಗೊಳಿಸಲು ಪ್ರಯತ್ನಿಸಲಾಗುವುದು’ ಎಂದರು.
‘ ರಾಜ್ಯಮಟ್ಟದಲ್ಲಿ ಸಹಕಾರಿ ಬ್ಯಾಂಕ್ಗಳ ಅಧ್ಯಕ್ಷರುಗಳ ಮತ್ತು ಅಧಿಕಾರಿಗಳ ಸಭೆಯನ್ನು ನಡೆಸಿಸಮಸ್ಯೆಗಳ ಬಗ್ಗೆ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಲಾಗುವುದು. ಸಹಕಾರಿ ಬ್ಯಾಂಕ್ಗಳಿಗೆ ತೆರಿಗೆಯಿಂದ ಸಮಸ್ಯೆಗಳಾಗುತ್ತಿವೆ ಎಂಬ ಬಗ್ಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ತರಲಾಗಿದೆ. ರಾಜ್ಯ ಸರ್ಕಾರ ಕೂಡ ತೆರಿಗೆ ಮಾಹಿತಿ ಪಡೆದು ಇನ್ನೊಮ್ಮೆ ಭೇಟಿಯಾಗಿ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಲಾಗುವುದು’ ಎಂದರು.
ಮಾರುಕಟ್ಟೆ ಸ್ಥಳಾಂತರ: ‘ಮಾರುಕಟ್ಟೆ ಸ್ಥಳಾಂತರಿಸಬೇಕು ಎಂಬ ಬೇಡಿಕೆ ಬಂದಿದೆ. ಸಂತೆ ಮಾರುಕಟ್ಟೆಯಿಂದ ವಾಹನ ನಿಲುಗಡೆ ಮತ್ತು ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು. ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣ ಉತ್ತಮ ಸ್ಥಳವಕಾಶವನ್ನು ಹೊಂದಿದ್ದು ಈಗ ನಡೆಯುತ್ತಿರುವ ಹೆದ್ದಾರಿ ಬಳಿಯ ಸಂತೆ ಮಾರುಕಟ್ಟೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಶಾಸಕ ಹರೀಶ್ ಪೂಂಜ, ಸಹಕಾರಿ ಭಾರತಿ ತಾಲ್ಲೂಕು ಘಟಕದ ಅಧ್ಯಕ್ಷ ಸುಂದರ ಹೆಗ್ಡೆ, ನಗರ ಪಂಚಾಯಿತಿ ಸದಸ್ಯ ಜಯಾನಂದ ಗೌಡ, ಎಪಿಎಂಸಿ ಸದಸ್ಯ ಜಯನಂದ ಕಲ್ಲಾಪು, ಸೋಮಶೇಖರ್, ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.