ಶುಕ್ರವಾರ, ಮಾರ್ಚ್ 24, 2023
30 °C

ಶಾಲೆ ದತ್ತು | ಶಾಸಕರ ನೀರಸ ಸ್ಪಂದನೆ: ಪ್ರೊ.ಎಂ.ಆರ್. ದೊರೆಸ್ವಾಮಿ ಬೇಸರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ಶಾಸಕರು, ವಿಧಾನ ಪರಿಷತ್‌ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವಂತೆ ನೀಡಿದ್ದ ಶಿಫಾರಸನ್ನು 2020–21ರ ರಾಜ್ಯ ಬಜೆಟ್‌ನಲ್ಲಿ ಸೇರಿಸಲಾಗಿದ್ದರೂ, ಶೇ 10ರಷ್ಟು ಜನಪ್ರತಿನಿಧಿಗಳು ಮಾತ್ರ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಮುಂಬರುವ ಚುನಾವಣೆ ವೇಳೆ ಮತ ಕೇಳಲು ಬರುವ ಪ್ರತಿನಿಧಿಗಳನ್ನು ಮತದಾರರು ಪ್ರಶ್ನಿಸಬೇಕು’ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ಸಲಹೆ ಮಾಡಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘224 ಕ್ಷೇತ್ರಗಳ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಈ ಸಂಬಂಧ ಪತ್ರ ಬರೆದು ಗಮನ ಸೆಳೆದಿದ್ದೇನೆ. ಆದರೆ, ಬೆರಳೆಣಿಕೆ ಶಾಸಕರು ಮಾತ್ರ ಸ್ಪಂದಿಸಿ, ತಮ್ಮ ಕ್ಷೇತ್ರಗಳಲ್ಲಿ ಸರ್ಕಾರಿ ಶಾಲೆ ದತ್ತು ಪಡೆದು, ಅಭಿವೃದ್ಧಿಗೊಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಕ್ಷೇತ್ರದಲ್ಲಿ ಕೆಲವು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಕ್ಷೇತ್ರದಲ್ಲಿ ಎಷ್ಟು ಶಾಲೆ ದತ್ತು ಪಡೆದಿದ್ದಾರೆ ಎಂಬ ಮಾಹಿತಿ ಇಲ್ಲ’ ಎಂದರು.

ರಾಜ್ಯದಲ್ಲಿ 48ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. ಶೇ 40ರಷ್ಟು ಶಾಲೆಗಳಲ್ಲಿ ಸರಿಯಾದ ಕುಡಿಯುವ ನೀರು, ಕಾಂಪೌಂಡ್ ಸೌಲಭ್ಯ ಇಲ್ಲ. ಶೇ 30ರಷ್ಟು ಶಾಲೆಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಸ್ವತಃ ಶಿಕ್ಷಣ ಸಚಿವರೇ ಈ ವಿಷಯ ಹೇಳಿದ್ದಾರೆ. ರಾಜ್ಯ ಸರ್ಕಾರವು ಮುಂಬರುವ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ₹10ಸಾವಿರ ಕೋಟಿ ಮೊತ್ತವನ್ನು ಮೀಸಲಿಟ್ಟು, ಏಕಕಂತಿನಲ್ಲಿ ಬಿಡುಗಡೆಗೊಳಿಸಿ, ಶಾಲೆಗಳ ಅಭಿವೃದ್ಧಿಗೆ ಆಸಕ್ತಿ ತೋರಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಎರಡು ವರ್ಷಗಳ ಹಿಂದೆ 18 ಶಿಫಾರಸುಗಳನ್ನು ನೀಡಲಾಗಿತ್ತು. ಅದರಲ್ಲಿ ಕೆಲವು ಮಾತ್ರ ಅನುಷ್ಠಾನಗೊಂಡಿವೆ. ರಾಜ್ಯದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಕಲಿತ ಶಾಲೆ ಅಭಿವೃದ್ಧಿಗೊಳಿಸುವ ಸಂಬಂಧ ನೀಡಿದ ಶಿಫಾರಸಿನಂತೆ, ಎಂಟು ಶಾಲೆಗಳು ₹ 16 ಕೋಟಿ ಮೊತ್ತದಲ್ಲಿ ಅಭಿವೃದ್ಧಿ ಕಾಣುತ್ತಿವೆ. ಅಂಗವಿಕಲ ವಿದ್ಯಾರ್ಥಿಗಳ ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿದೆ. ನಾನು ಕೂಡ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಹಲವು ಬಾರಿ ಗಮನಕ್ಕೆ ತಂದರೂ, ರಾಜ್ಯ ಸರ್ಕಾರ ಈ ಬಗ್ಗೆ ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯದ ಸುಮಾರು 50 ವಿಶ್ವವಿದ್ಯಾಲಯಗಳನ್ನು ಸಂಪರ್ಕಿಸಿದ್ದು, ಅವುಗಳಲ್ಲಿ ರೇವಾ ವಿವಿ, ಜಿಕೆವಿಕೆ ಬೆಂಗಳೂರು, ಮೈಸೂರು ವಿವಿ, ಮಂಗಳೂರು ವಿವಿ ಸೇರಿದಂತೆ 30 ವಿಶ್ವವಿದ್ಯಾಲಯಗಳು ಸರ್ಕಾರಿ ಶಾಲೆಗಳನ್ನು ದತ್ತುಪಡೆಯಲು ಉತ್ಸಾಹ ತೋರಿವೆ, ಸ್ವಾಯತ್ತ ಕಾಲೇಜುಗಳು ಸಹ ಮುಂದೆ ಬಂದಿವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಪ್ರೊ. ಶ್ರೀನಿವಾಸ್ ಉಪಸ್ಥಿತರಿದ್ದರು.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು