21ರೊಳಗೆ ಸರ್ಕಾರಿ ಶಾಲೆ ಆರಂಭಿಸಲು ಆಗ್ರಹ- ಹೋರಾಟದ ಎಚ್ಚರಿಕೆ

ಬಂಟ್ವಾಳ: ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಇದೇ 21ರೊಳಗೆ ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳನ್ನು ಪುನರಾರಂಭಿಸಬೇಕು. ಇಲ್ಲದಿದ್ದಲ್ಲಿ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಎಚ್ಚರಿಸಿದ್ದಾರೆ.
ಇಲ್ಲಿನ ದಡ್ಡಲಕಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಮತ್ತು ಶ್ರೀ ದುರ್ಗಾ ಚಾರಿಟಬಲ್ ಟ್ರಸ್ಟಿನ ವತಿಯಿಂದ ಭಾನುವಾರ ನಡೆದ ಜಂಟಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದೆ ಎಂದಿದ್ದಾರೆ.
‘ಕೋವಿಡ್ ಅನ್ಲಾಕ್ ಪ್ರಕ್ರಿಯೆ ಆರಂಭಗೊಂಡು ಎಲ್ಲಾ ಸಾರ್ವಜನಿಕ ವಲಯಗಳಲ್ಲಿ ಚಟುವಟಿಕೆಗಳು ಆರಂಭಗೊಂಡಿದೆ. ,ಶಾಲೆಗಳನ್ನು ಮಾತ್ರ ಪುನರಾರಂಭಿಸದೆ ಇರುವ ಬಗ್ಗೆ ರಾಜ್ಯದಾದ್ಯಂತ ಹಲವಾರು ಪೋಷಕರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಆನ್ಲೈನ್ ಮತ್ತು ವಿದ್ಯಾಗಮ ಶಿಕ್ಷಣ ವ್ಯವಸ್ಥೆಗೆ ಬದಲಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮುಖಾಮುಖಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು’ ಎಂದು ಸಮಿತಿ ಆಗ್ರಹಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಹಿತ ಶಿಕ್ಷಣ ಸಚಿವರು ಮತ್ತು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಡ್ ಅಭಿಯಾನ: ಈ ಬಗ್ಗೆ ಸರ್ಕಾರದ ಗಮನ ಸೆಳೆಯಲು ರಾಜ್ಯದಾದ್ಯಂತ ಕಾರ್ಡ್ ಅಭಿಯಾನ ಆರಂಭಿಸಲು ಸಮಿತಿ ನಿರ್ಧರಿಸಿದ್ದು, ಎಲ್ಲಾ ಪೋಷಕರು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ರಾಜ್ಯ ಸಮಿತಿ ಕಾರ್ಯದರ್ಶಿ ಪುರುಷೋತ್ತಮ ಅಂಚನ್, ಸದಸ್ಯರಾದ ರಾಮಚಂದ್ರ ಪೂಜಾರಿ ಕರೆಂಕಿ, ಪೂವಪ್ಪ ಮೆಂಡನ್, ನವೀನ್ ಸೇಸಗುರಿ, ಅಶ್ವತ್ ಡೆಚ್ಚಾರ್, ಬಾಲಕೃಷ್ಣ ಜಿ. ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.