ಶಿರಾ: ಕಾಂಗ್ರೆಸ್ ಮತ್ತು ಬಿಜೆಪಿ ರೈತ ವಿರೋಧಿ ನಿಲುವು ಹೊಂದಿವೆ. ಆದರೆ ರೈತರಿಗೆ ಅನ್ಯಾಯವಾಗಲು ನಾನುಬಿಡುವುದಿಲ್ಲ. ಜೀವನದ ಕೊನೆ ಕ್ಷಣದವರೆಗೂ ರೈತರ ಪರವಾಗಿ ಹೋರಾಡುತ್ತೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.
ತಾಲ್ಲೂಕಿನ ಚಂಗಾವರ ಗ್ರಾಮದಲ್ಲಿ ಬುಧವಾರ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಮತ್ತು ಬಿಜೆಪಿ ನಮ್ಮ ಮುಖಂಡರನ್ನು ಸೆಳೆದುಕೊಂಡಿದ್ದಾರೆ. ಆದರೆ ಕಾರ್ಯಕರ್ತರ ಪಡೆ ನಮ್ಮಲ್ಲಿದೆ. ಯಾರೇ ಪಕ್ಷ ಬಿಟ್ಟು ಹೋದರು ಪಕ್ಷಕ್ಕೆ ನಷ್ಟವಿಲ್ಲ. ಪಕ್ಷಕ್ಕೆ ನಿಷ್ಠರಾಗಿದ್ದ ಬಿ.ಸತ್ಯನಾರಾಯಣ ಅವರ ಕುಟುಂಬಕ್ಕೆ ಟಿಕೆಟ್ ನೀಡಿದ್ದು, ನಿಮ್ಮೆಲ್ಲರ ಸಹಕಾರದಿಂದ ಅವರನ್ನು ಗೆಲ್ಲಿಸಿಕೊಂಡು ಬರಲಾಗುವುದು ಎಂದರು.
ಶಿರಾದ ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಗಳವಾರ ಮಳೆಯಿಂದ ಶೇಂಗಾ ಕೊಚ್ಚಿ ಹೋಗಿ ರೈತರಿಗೆ ನಷ್ಟವಾಗಿದೆ. ಅವರಿಗೆ ಪರಿಹಾರ ನೀಡಬೇಕು ಇಲ್ಲದಿದ್ದರೆ ಹೋರಾಟ ನಡೆಸುತ್ತೇನೆ ಒಂದು ವೇಳೆ ನಿಮ್ಮ ಕೈಯಲ್ಲಿ ನೀಡಲು ಸಾಧ್ಯವಾಗದಿದ್ದರೆ ಎಷ್ಟು ನಷ್ಟವಾಗಿದೆ ಎಂದು ಲೆಕ್ಕ ಬರೆದಿಡಿ. ಮುಂದೆ ನಾವು ಅಧಿಕಾರಕ್ಕೆ ಬಂದಾಗ ಪರಿಹಾರ ನೀಡಲಾಗುವುದು ಎಂದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ‘ಬಿಜೆಪಿ ಪಾಪದ ಹಣದಿಂದ ಗೆಲ್ಲಬಹುದು ಎಂದು ಲೆಕ್ಕಾಚಾರ ಹಾಕಿಕೊಂಡಿದೆ. ಆದರೆ ಇಲ್ಲಿನ ಮತದಾರರನ್ನು ಹಣದಿಂದ ಖರೀದಿಸಲು ಸಾಧ್ಯವಿಲ್ಲ. ಬಿಜೆಪಿ ಅವರ ಆಟ ಇಲ್ಲಿ ನಡೆಯುವುದಿಲ್ಲ ಎಂದರು.
ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಮನೆ ಕಳೆದುಕೊಂಡು ಬೀದಿಯಲ್ಲಿ ನಿಂತಿದ್ದಾರೆ. ತಿನ್ನಲು ಅನ್ನವಿಲ್ಲ ಅವರಿಗಾದರೂ ನಿಮ್ಮ ಪಾಪದ ಹಣ ಬಳಸಿಕೊಂಡು ವ್ಯವಸ್ಥೆ ಕಲ್ಪಿಸಿ ಎಂದರು.
ಶಾಸಕ ಎಚ್.ಡಿ.ರೇವಣ್ಣ, ‘ಹಿಂದೆ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದರೆ. ಈಗ ಪ್ರಧಾನಿ ನರೇಂದ್ರ ಮೋದಿ ಮತ್ತೇ ಅಂತಹದೇ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಮಾತನಾಡುವ ಸ್ವಾತಂತ್ರ್ಯ ಕಿತ್ತುಕೊಂಡಿದ್ದಾರೆ. ಮುಖ್ಯಮಂತ್ರಿ ಪುತ್ರ ಪ್ರಚಾರಕ್ಕೆ 200- 300 ಕಾರುಗಳನ್ನು ಬಳಸಿಕೊಳ್ಳುತ್ತಿದ್ದರೂ, ಚುನಾವಣೆ ಆಯೋಗ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದರು.
ಜೆಡಿಎಸ್ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಗೌರಿಶಂಕರ್, ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಉಗ್ರೇಶ್, ಮುಖಂಡರಾದ ವೈಎಸ್ವಿ ದತ್ತ, ನಿಂಗಪ್ಪ ಇದ್ದರು.