ಮಂಗಳೂರು: ಸಾಮಾಜಿಕ ಹೋರಾಟಗಾರ ಪ್ರೊ.ಪಟ್ಟಾಭಿರಾಮ ಸೋಮಯಾಜಿ ನಗರದ ದೇರೆಬೈಲ್ನಲ್ಲಿರುವ ತಮ್ಮ ಮನೆಯಲ್ಲಿ ಶನಿವಾರ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು.
ಮನೆಯಲ್ಲಿ ಒಬ್ಬರೇ ವಾಸವಿದ್ದರು. ಶುಕ್ರವಾರ ರಾತ್ರಿ ಕೆಲವು ಆಪ್ತರೊಡನೆ ದೂರವಾಣಿಯಲ್ಲಿ ಮಾತನಾಡಿದ್ದರು. ಶನಿವಾರ ಬೆಳಿಗ್ಗೆ ಅವರು ಮನೆಯಿಂದ ಹೊರಗೆ ಬಾರದಿದ್ದುದನ್ನು ಕಂಡು ಅಕ್ಕಪಕ್ಕದ ನಿವಾಸಿಗಳು ಪೊಲೀಸರರಿಗೆ ಮಾಹಿತಿ ನೀಡಿದ್ದರು. ಮನೆಯ ಬಾಗಿಲನ್ನು ಒಡೆದು ನೋಡಿದಾಗ ಅವರು ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದುದು ಕಂಡು ಬಂದಿತ್ತು.
ಕರಾವಳಿಯಲ್ಲಿ ಕೋಮುವಾದ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಮತೀಯ ಗೂಂಡಾಗಿರಿ ವಿರುದ್ಧವೂ ಧ್ವನಿ ಎತ್ತುತ್ತಿದ್ದರು. ಈ ಕುರಿತ ಪ್ರತಿಭಟನೆಗಳಲ್ಲಿ ಪ್ರಖರ ಭಾಷಣ ಮಾಡುತ್ತಿದ್ದರು.
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ವಿಚ್ಛೇದಿತರಾಗಿರುವ ಅವರಿಗೆ ಮಕ್ಕಳು ಇರಲಿಲ್ಲ ಎಂದು ಆಪ್ತರು ತಿಳಿಸಿದ್ದಾರೆ.