ಉಜಿರೆ: ಇಲ್ಲಿನ ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ ಜಿ.ಕೆ, ಎಸ್ಸೆಸ್ಸೆಲ್ಸಿಯಲ್ಲಿ 624 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.
ವಿಜ್ಞಾನದಲ್ಲಿ 99 ಅಂಕ ಹೊರತುಪಡಿಸಿ ಉಳಿದೆಲ್ಲ ವಿಷಯಗಳಲ್ಲಿ ಪೂರ್ಣ ಅಂಕಗಳು ಬಂದಿವೆ. ಬೆಳ್ತಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಗಣೇಶ ರಾಮಚಂದ್ರ ಭಟ್ ಮತ್ತು ಕಲ್ಮಂಜ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಮಾಲಿನಿ ಹೆಗಡೆ ದಂಪತಿ ಪುತ್ರ ಚಿನ್ಮಯ.
ಶಿಕ್ಷಕರು ಮತ್ತು ಪೋಷಕರ ಪ್ರೋತ್ಸಾಹ ಹಾಗೂ ಸತತ ಪರಿಶ್ರಮವೇ ಸಾಧನೆಗೆ ಸಹಕಾರಿಯಾಗಿದೆ ಎನ್ನುವ ಚಿನ್ಮಯ ಎಂಜಿನಿಯರ್ ಆಗುವ ಗುರಿ ಹೊಂದಿದ್ದಾರೆ. ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ವಿದ್ಯಾರ್ಥಿಯನ್ನು ಅಭಿನಂದಿಸಿದರು.