ಮಂಗಳೂರು: ತುಳು ಪರಿಷತ್ ಹಾಗೂ ಮಂಗಳೂರು ವಿಶ್ವವಿದ್ಯಾಲಯಗಳ ಆಶ್ರಯದಲ್ಲಿ ಗುರುವಾರ (ಇದೇ 16) ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪ್ರಥಮ ತುಳು ವಿದ್ಯಾರ್ಥಿ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಪ್ರತಿನಿಧಿಗಳಾಗಿ ಭಾಗವಹಿಸಲಿದ್ದಾರೆ.
ಸಮ್ಮೇಳನದ ಅಧ್ಯಕ್ಷತೆಯನ್ನು ಸುರತ್ಕಲ್ ಗೋವಿಂದಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯ ಜೀವನ್ ವಹಿಸಲಿದ್ದಾರೆ. ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಅವರು, ಈ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನಕ್ಕೆ ಶುಭಕೋರಿ ಮಾತನಾಡಲಿದ್ದಾರೆ.
ಸಮ್ಮೇಳನದ ವಿಚಾರ ಗೋಷ್ಠಿ, ಕವಿಗೋಷ್ಠಿಯನ್ನು ವಿದ್ಯಾರ್ಥಿಗಳು ನಡೆಸಿಕೊಡಲಿದ್ದಾರೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಚಿನ್ನಪ್ಪ ಗೌಡ, ತುಳು ನಾಡು ನುಡಿಯ ಬಗ್ಗೆ ನಡೆಯುವ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲಿದ್ದಾರೆ.
ಸಮ್ಮೇಳನದ ವಿದ್ಯಾರ್ಥಿಗಳು ತುಳು ವಿಚಾರ ಗೋಷ್ಠಿ, ತುಳು ಕವಿಗೋಷ್ಠಿಯನ್ನು ನಡೆಸಿಕೊಡಲಿದ್ದಾರೆ. ವಿದ್ಯಾರ್ಥಿಗಳು ನಡೆಸಿ ಕೊಡುವ ತುಳು ಪದರಂಗಿತ, ತುಳುನಾಡ ತುತ್ತೈತ ಸಮ್ಮೇಳನಕ್ಕೆ ವಿಶೇಷ ಮೆರುಗು ಕೊಡಲಿದೆ.
ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲಸಾರ್ ಅವರು, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಸ್ವರ್ಣ ಸುಂದರ್ ಹಾಗೂ ಅಧ್ಯಕ್ಷ ಡಾ. ಪ್ರಭಾಕರ್ ನೀರುಮಾರ್ಗ ತಿಳಿಸಿದ್ದಾರೆ.