ಮುಡಿಪು: ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಅಧ್ಯಯನ ಕೇಂದ್ರ, ಮೂಡುಬಿದಿರೆ ಶ್ರೀಧವಲಾ ಮಹಾವಿದ್ಯಾಲಯ ಕನ್ನಡ ವಿಭಾಗದ ಸಹಯೋಗದೊಂದಿಗೆ ಇದೇ 19 ಶ್ರೀಧವಳಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ಯಕ್ಷಗಾನದಲ್ಲಿ ಹಾಸ್ಯ ಎಂಬ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣವನ್ನು ಆಯೋಜಿಸಿದೆ.
ಬೆಳಗ್ಗೆ 10 ಗಂಟೆಗೆ ವಿಚಾರಸಂಕಿರಣವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಎ.ಎಂ. ಖಾನ್ ಉದ್ಘಾಟಿಸಲಿದ್ದಾರೆ. ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಆಶಯ ಭಾಷಣ ಮಾಡಲಿದ್ದಾರೆ. ಡಿಜೆ ವಿದ್ಯಾವರ್ಧಕ ಸಂಘದ ಸಂಚಾಲಕರಾದ ಕೆ. ಹೇಮರಾಜ್ ಅತಿಥಿಗಳಾಗಿ ಭಾಗವಹಿಸಲಿದ್ದು ಧವಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ ರವೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದಾರೆ.
ಮಧ್ಯಾಹ್ನ 3 ಗಂಟೆಯಿಂದ ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದರಾದ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ ಇವರೊಂದಿಗೆ ಸಂವಾದ ಕಾರ್ಯಕ್ರಮವಿದೆ. ಸಮಾರೋಪದಲ್ಲಿ ಮೂಡುಬಿದಿರೆಯ ಡಿಜೆ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಅಭಿಜಿತ್ ಎಂ. ಅಧ್ಯಕ್ಷತೆ ವಹಿಸಲಿದ್ದು ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ. ಕೃಷ್ಣಮೂರ್ತಿ ಪಿ. ಸುರತ್ಕಲ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀಧವಲಾ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಮಲ್ಲಿಕಾ ಉಪಸ್ಥಿತರಿರುವರು.