ಉಳ್ಳಾಲ: ‘ತುಳು ಭಾಷೆಯ ಸುವರ್ಣ ಯುಗ ಪ್ರಾರಂಭಗೊಂಡಿದ್ದು ಎಲ್ಲಾ ಕಡೆ ತುಳುವಿಗೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯುತ್ತಿವೆ. ಸಂಸ್ಕಾರ ನೀಡುವ ಕಾರ್ಯಕ್ರಮಗಳ ಮೂಲಕ ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ಮುಟ್ಟಿಸಲು ಸಾಧ್ಯ’ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಭಿಪ್ರಾಯಪಟ್ಟರು.
ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ನಡೆಯುತ್ತಿರುವ 6ನೇ ವರ್ಷದ ನಾಡುನುಡಿ ವೈಭವದ ರತ್ನೋತ್ಸವ-2017 ಕರಾವಳಿ ಕರ್ನಾಟಕದ ಸಾಹಿತ್ಯ ಸಾಂಸ್ಕ್ರತಿಕ ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಮೌಲ್ಯಾಧಾರಿತ ಶಿಕ್ಷಣದೊಂದಿಗೆ ನಮ್ಮ ತುಳುನಾಡಿನ ಕೃಷಿ ಸಂಸ್ಕೃತಿಯ ಸಂಸ್ಕಾರ ನೀಡುವ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯಕ್ರಮ ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿ’ ಎಂದು ತಿಳಿಸಿದರು.
‘ಸರ್ವ ಶಿಕ್ಷಣ ಆಭಿಯಾನ, ಶಿಕ್ಷಣ ಮಾಹಿತಿ ಹಕ್ಕು ಬಂದ ನಂತರ ಪ್ರತಿಯೊಬ್ಬರು ಶಿಕ್ಷಣ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಶೋಷಣೆಮುಕ್ತ ಸಮಾಜ ನಿರ್ಮಾಣವಾಗಬೇಕಾದರೆ ಎಲ್ಲರೂ ಶಿಕ್ಷಣ ಪಡೆಯಬೇಕು. ಸ್ವಸ್ಥ ಸಮಾಜ ನಿರ್ಮಾಣವಾದಾಗ ಅಭಿವೃದ್ಧಿ ಸಾಧ್ಯಗುತ್ತದೆ’ ಎಂದರು. ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ಮಲಾರ್ ಜಯರಾಮ್ ರೈ ವಹಿಸಿದ್ದರು.
ಕೋಟೆಕಾರು ಶ್ರೀ ಶಂಕರ ಮಠದ ಧರ್ಮಾಧಿಕಾರಿ ಸತ್ಯಶಂಕರ ಬೊಳ್ಳಾವ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಕೆ.ಟಿ. ಸುವರ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮಿ ಗಟ್ಟಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮುಸ್ತಫಾ ಮಲಾರ್, ಸುರತ್ಕಲ್ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲ್ಬಾವಿ, ಕೊರಗಪ್ಪ ಶೆಟ್ಟಿ ಹರೇಕಳ, ರತ್ನಾವತಿ ಕೊರಗಪ್ಪ ಶೆಟ್ಟಿ, ಟ್ರಸ್ಟ್ ಉಪಾಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಹರೇಕಳ, ಬೆಳ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಾ ಕೃಷ್ಣಪ್ಪ, ಮುಖ್ಯ ಶಿಕ್ಷಕಿ ನಯೀಮ್ ಹಮೀದ್ ಹಾಗೂ ವಿದ್ಯಾರ್ಥಿ ನಾಯಕ ಶ್ರೇಯಸ್ ಇದ್ದರು.
ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು ಮೆರವಣಿಗೆಗೆ ಚಾಲನೆ ನೀಡಿದರು. ದೇರಳಕಟ್ಟೆ ರತ್ನ ಎಜುಕೇಶನ್ ಟ್ರಸ್ಟ್ ಕೋಶಾಧಿಕಾರಿ ರತ್ನಾವತಿ ಕೆ. ಶೆಟ್ಟಿ ಧ್ವಜಾರೋಹಣ ಮಾಡಿದರು.
ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ವಿದ್ಯಾರತ್ನ ಸಂಸ್ಥೆಯ ಕಾರ್ಯದರ್ಶಿ ಸೌಮ್ಯಾ ಆರ್. ಶೆಟ್ಟಿ ವಂದಿಸಿದರು. ಶಿಕ್ಷಕರಾದ ರವೀಶ್ ಮತ್ತು ನವೀನ್ ನಿರ್ವಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.