ಚನ್ನಗಿರಿ: ಎರಡೂವರೆ ವರ್ಷದ ಅವಧಿಯಲ್ಲಿ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಉತ್ತಮ ಸಂಪರ್ಕ ರಸ್ತೆಗಳನ್ನು ನಿರ್ಮಿಸಲು ಬದ್ಧ ಎಂದು ಸಾಬೂನು ಮತ್ತು ಮಾರ್ಜಕ ನಿಗಮ ಮಂಡಳಿ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.
ತಾಲ್ಲೂಕಿನ ಶಿವಗಂಗೇಹಾಳ್ ಗ್ರಾಮದಲ್ಲಿ ಶನಿವಾರ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿದ ರಸ್ತೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಶಿವಗಂಗೇಹಾಳ್ ಕುಗ್ರಾಮವಾಗಿದ್ದು, ಇದನ್ನು ಗುರುತಿಸಿ ₹ 2.25 ಕೋಟಿ ವೆಚ್ಚದಲ್ಲಿ ಉತ್ತಮ ಸಂಪರ್ಕ ರಸ್ತೆಯನ್ನು ನಿರ್ಮಿಸಲಾಗಿದೆ. ಈಗಾಗಲೇ ಕ್ಷೇತ್ರದ ಎಲ್ಲ ಗ್ರಾಮಗಳನ್ನು ದೂಳುಮುಕ್ತ ಗ್ರಾಮಗಳನ್ನಾಗಿ ಮಾಡುವ ಉದ್ದೇಶದಿಂದ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ ಎಂದರು.
‘ಸದರಿ ಗ್ರಾಮಕ್ಕೆ ಶಾಲಾ ಕೊಠಡಿ, ಅಂಗನವಾಡಿ ಕಟ್ಟಡ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈಗಾಗಲೇ ಸಾಗುವಳಿ ಮಾಡಿಕೊಂಡಿರುವ ಜಮೀನುಗಳಲ್ಲಿ ಸಾಗುವಳಿ ಮುಂದುವರಿಸಿ. ಅರಣ್ಯ ಇಲಾಖೆಯಿಂದ ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು’ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಎನ್. ಲೋಕೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ಕಲ್ಲೇಶ್, ಲೋಕೋಪಯೋಗಿ ಇಲಾಖೆ ಎಇಇ ವೈ.ಎನ್, ವಿಜಯಕುಮಾರ್, ರವಿಕುಮಾರ್, ರುದ್ರೇಗೌಡ್ರು, ದಾಸಪ್ಪ, ಮಲ್ಲಿಕಾರ್ಜುನ್ ಶೆಟ್ಟಿ, ಜಲೀಲ್ ಇದ್ದರು.