ಚನ್ನಗಿರಿ: ‘ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಎಪಿಎಂಸಿ ಪ್ರಾಂಗಣದಲ್ಲಿ 1000 ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾಮನ್ನು ನಿರ್ಮಾಣ ಮಾಡಲಾಗಿದೆ. ನಾನು ಕೂಡ ರೈತನ ಮಗನಾಗಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧ’ ಎಂದು ರಾಜ್ಯ ಸಾಬೂನು ಮತ್ತು ಮಾರ್ಜಕ ಮಂಡಳಿ ನಿಗಮದ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.
ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಶನಿವಾರ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಸಂತೆ ಮೈದಾನದಲ್ಲಿ ಮಾರುಕಟ್ಟೆ ನಿರ್ಮಿಸಲು ₹ 3 ಕೋಟಿ ಅನುದಾನ ಬಿಡುಗಡೆಗೊಳಿಸುತ್ತೇನೆ.₹ 1.83 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, ಕಮಾನು, ಚರಂಡಿ, ಪಾದಚಾರಿ ರಸ್ತೆ, ಉಪಹಾರ ಗೃಹ ನವೀಕರಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.
ಸೆಸ್ ಸಂಗ್ರಹದಲ್ಲಿ ಜಿಲ್ಲೆಯಲ್ಲಿಯೇ ಈ ಎಪಿಎಂಸಿ ಎರಡನೇ ಸ್ಥಾನದಲ್ಲಿದೆ. ರೈತರಿಗೆ ಅನ್ಯಾಯವಾಗದ ರೀತಿಯಲ್ಲಿ ಅವರ ಸಮಸ್ಯೆಗಳನ್ನು ಬಗೆಹರಿಸಬೇಕು. ಎಪಿಎಂಸಿ ಆಡಳಿತ ಮಂಡಳಿ ಈ ಎಲ್ಲಾ ಕಾಮಗಾರಿಗಳ ನಿರ್ವಹಣೆಯನ್ನು ಮಾಡಬೇಕು ಎಂದು ಸೂಚಿಸಿದರು.
ಸದಸ್ಯರಾದ ಟಿ. ನಾಗರಾಜ್, ಟಿ. ನಾಗರಾಜ್, ಜಿ.ಆರ್. ಪ್ರಕಾಶ್, ವೀರಭದ್ರಪ್ಪ, ಕಗ್ಗಿ ರಾಜು, ಉಪಾಧ್ಯಕ್ಷೆ ಜಯ್ಯಮ್ಮ, ಕಾರ್ಯದರ್ಶಿ ಸೋಮಶೇಖರ್, ಎಂ.ಬಿ. ರಾಜಪ್ಪ, ವಿಜಯಕುಮಾರ್ ಉಪಸ್ಥಿತರಿದ್ದರು. ಅಧ್ಯಕ್ಷ ಜಿ.ಬಿ. ಜಗನ್ನಾಥ್ ಅಧ್ಯಕ್ಷತೆ ವಹಿಸಿದ್ದರು.