ದಾವಣಗೆರೆ: ಕಾನೂನಿನ ಮೂಲಕವೇ ಮಕ್ಕಳನ್ನು ದತ್ತು ಪಡೆದು ಪರಿಪಾಲನೆ ಮಾಡಬೇಕು. ಅನಧಿಕೃತವಾಗಿ ದತ್ತು ಪಡೆಯುವುದು ಅಪರಾಧ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.
ನಗರದ ಜಯದೇವ ವೃತ್ತದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮದ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು.
ಹಿಂದೆ ಸಂಬಂಧಿಕರ ಅಥವಾ ತಮಗೆ ಬೇಕಾದವರ ಬಳಿ ಮಕ್ಕಳನ್ನು ದತ್ತು ಪಡೆದು ಸಾಕುತ್ತಿದ್ದರು. ಈಗ ಕಾನೂನು ಬದಲಾಗಿದೆ. ಎಲ್ಲವೂ ಕಾನೂನಿನ ಪ್ರಕಾರವೇ ಮಾಡಬೇಕಾಗಿದೆ. ಇತ್ತೀಚಿನ ದಿನಮಾನಗಳಲ್ಲಿ ಕೇವಲ ಸಂಬಂಧಿಕರ ತಮ್ಮ ಹತ್ತಿರದವರ ಮಕ್ಕಳನ್ನು ಮಾತ್ರವಲ್ಲದೆ ಅನಾಥ ಮಕ್ಕಳನ್ನು ದತ್ತು ಪಡೆಯುವ ಪ್ರಕ್ರಿಯೆ ಜಾರಿಗೆ ಬಂದಿದೆ. ಇದಕ್ಕೆ ಕಾನೂನಿನ ಪ್ರಕ್ರಿಯೆ ಅಗತ್ಯ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ಮಾತನಾಡಿ, ‘ನಾವು ಕಾನೂನು ಪ್ರಕಾರವೇ ಎಲ್ಲಾ ಕೆಲಸಗಳನ್ನು ಮಾಡಬೇಕು. ಕೆಲವೊಂದು ವೇಳೆ ತಪ್ಪುಗಳನ್ನು ಮಾಡಿದಾಗ ಕಾನೂನು ಗೊತ್ತಿರಲಿಲ್ಲ ಎನ್ನುತ್ತಾರೆ. ಇಂತಹ ತಪ್ಪುಗಳು ಮರುಕಳಿಸಬಾರದು ಎಂಬ ಕಾರಣಕ್ಕೆ ಅರಿವು ಮೂಡಿಸಲಾಗುತ್ತಿದೆ. ಎಲ್ಲರೂ ಕಾನೂನನ್ನು ಅರಿತು ಬಾಳಬೇಕು. ಆಗ ಯಾವುದೇ ತೊಂದರೆಗಳು ಎದುರಾಗುವುದಿಲ್ಲ. ಮಕ್ಕಳನ್ನು ದತ್ತು ತೆಗೆದುಕೊಳ್ಳುವ ವೇಳೆ ನಾವು ಕಾನೂನನ್ನು ಅನುಸರಿಸಬೇಕು’ ಎಂದು ಸಲಹೆ ನೀಡಿದರು.
ಜಾಥಾದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ಡಿಡಿಪಿಐ ಜಿ.ಆರ್. ತಿಪ್ಪೇಶಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ, ಅಮೀರಾಬಾನು ಇತರರು ಇದ್ದರು.