ದಾವಣಗೆರೆ: ವಿದ್ಯಾರ್ಥಿನಿಯರ ವಸತಿನಿಲಯಗಳ ಸ್ಥಿತಿ ಶೋಚನೀಯವಾಗಿದ್ದು, ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮೊಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್(ಎಐಡಿಎಸ್ಒ) ಬುಧವಾರ ಜಯದೇವ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಕೊರೊನಾ ಕಾರಣದಿಂದ ಲಾಕ್ಡೌನ್ ಮಾಡಿ ವಿದ್ಯಾರ್ಥಿಗಳನ್ನು ಅವರ ಮನೆಗೆ ಕಳುಹಿಸಲಾಗಿತ್ತು. ಈಗ ಪದವಿ ಪರೀಕ್ಷೆಗಳು ಆರಂಭಗೊಂಡಿರುವುದರಿಂದ ವಿದ್ಯಾರ್ಥಿಗಳು ವಸತಿನಿಲಯಗಳಿಗೆ ವಾಪಸ್ಸಾಗಿದ್ದಾರೆ. ಆದರೆ ವಸತಿನಿಲಯಗಳಲ್ಲಿ ಸ್ವಚ್ಛತೆ ಇಲ್ಲ. ಶೌಚಾಲಯ ದುರ್ವಾಸನೆ ಬೀರುತ್ತಿದೆ. ಕೊಠಡಿಗಳಲ್ಲಿ ದೂಳು ತುಂಬಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.
ಸ್ವಚ್ಛ ಮಾಡದೇ ಇರುವ ಬಾಡ ಕ್ರಾಸ್ ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿ ಈಗಾಗಲೇ ತಂಗಿರುವ ವಿದ್ಯಾರ್ಥಿನಿಯರನ್ನು ಕೂಡಲೇ ನಗರದ ಒಳಗೆ ಸ್ಯಾನಿಟೈಜ್ ಮಾಡಿದ ಹಾಸ್ಟೆಲ್ಗೆ ವರ್ಗಾವಣೆ ಮಾಡಬೇಕು. ಖಾಲಿ ಇರುವ ಎಲ್ಲಾ ಹಾಸ್ಟೆಲ್ಗಳನ್ನು ಶುಚಿ ಮಾಡಿಸಿ ಸಾನಿಟೈಜ್ ಮಾಡಿಸಬೇಕು. ಪದವಿ ಪರೀಕ್ಷೆಗಳು ನಡೆಯುತ್ತಿವೆ. ದೂರದ ಹಾಸ್ಟೆಲ್ಗಳಿಗೆ ಹಾಕುವ ಬದಲು ಅವರ ಅಭ್ಯಾಸ ಕ್ರಮಕ್ಕೆ ತೊಂದರೆಯಾಗದಂತೆ ನಗರದ ಒಳಗಡೆ ಇರುವ ಹಾಸ್ಟೆಲ್ಗಳಲ್ಲಿ ತಂಗಲು ವ್ಯವಸ್ಥೆ ಕಲ್ಪಿಸಬೇಕು. ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದು ಆಗ್ರಹಿಸಿದರು.
ಎಐಡಿಎಸ್ಒ ಜಿಲ್ಲಾ ಘಟಕದ ಅಧ್ಯಕ್ಷೆ ಸೌಮ್ಯ ಜೆ., ಜಂಟಿ ಕಾರ್ಯದರ್ಶಿ ಕಾವ್ಯ, ಜಿಲ್ಲಾ ಸಮಿತಿ ಸದಸ್ಯರಾದ ಸ್ವಪ್ನಾ, ಪುಷ್ಪಾ, ಸೌಂದರ್ಯ ಹಾಗೂ ಸುನೀತಾ, ರಂಜಿತ, ವಸತಿನಿಲಯದ ವಿದ್ಯಾರ್ಥಿನಿಯರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.