ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸ ಆರಂಭಿಸುವ ಮೊದಲೇ ಭ್ರಷ್ಟಾಚಾರ ಆರೋಪ ಮಾಡುವವರಿಗೆ ಉತ್ತರಿಸಲ್ಲ: ಬೈರತಿ

Last Updated 11 ಜನವರಿ 2021, 7:32 IST
ಅಕ್ಷರ ಗಾತ್ರ

ದಾವಣಗೆರೆ: ₹ 15 ಕೋಟಿ ಅನುದಾನದಲ್ಲಿ ಕುಂದವಾಡ ಕೆರೆಯನ್ನು ಅಭಿವೃದ್ಧಿ ಮಾಡಲಾಗುವುದು. ಯಾವೆಲ್ಲ ಕಾಮಗಾರಿಯನ್ನು ಎಷ್ಟು ವೆಚ್ಚದಲ್ಲಿ ನಿರ್ವಹಿಸಲಾಗುವುದು ಎಂಬ ವಿವರಗಳು ಇವೆ. ಕಾಮಗಾರಿ ಆರಂಭಗೊಳ್ಳುವ ಮೊದಲೇ ಭ್ರಷ್ಟಾಚಾರ ಎಂದು ಆರೋಪಿಸುವವರಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.

ನಗರದಲ್ಲಿ ಸೋಮವಾರ ಸ್ಮಾರ್ಟ್‌ಸಿಟಿ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಈ ಅಭಿವೃದ್ಧಿ ಯೋಜನೆಗೆ ಹಿಂದಿನ ಸರ್ಕಾರ ಅನುಮೋದನೆ ನೀಡಿರುವುದು. ಹಾಗಾದರೆ ಅವರು ಭ್ರಷ್ಟಾಚಾರ ನಡೆಸಲು ಅನುಮೋದನೆ ನೀಡಿದ್ರಾ ಎಂದು ಪ್ರಶ್ನಿಸಿದರು.

ಅಕ್ರಮ ಸಕ್ರಮ: ‘ಕಂದಾಯ ಭೂಮಿಯಲ್ಲಿ ನಿವೇಶನ ಮಾಡಿಕೊಂಡಿರುವ, ಮನೆ ನಿರ್ಮಿಸಿಕೊಂಡಿರುವವುಗಳನ್ನು ದಂಡ ಕಟ್ಟಿಸಿಕೊಂಡು ಸಕ್ರಮಗೊಳಿಸಲು ಸರ್ಕಾರ ನಿರ್ಧರಿಸಲಿದೆ. ಈ ಬಗ್ಗೆ ಈಗಾಗಲೇ ಎರಡು ಸಭೆಗಳನ್ನು ನಡೆಸಿದ್ದೇನೆ. ದಾವಣಗೆರೆಯಲ್ಲಿ ಸುಮಾರು 65 ಸಾವಿರ ನಿವೇಶನ ಮತ್ತು ಮನೆಗಳು ಕಂದಾಯ ಜಮೀನಿನಲ್ಲಿವೆ’ ಎಂದು ತಿಳಿಸಿದರು.

18 ಮನೆಗೆ ಹಾನಿ: ಅಕಾಲಿಕ ಮಳೆಯಿಂದ 18 ಮನೆಗಳು ಕುಸಿದಿವೆ. ಅವುಗಳಿಗೆ ಪರಿಹಾರ ನೀಡಲು ಸೂಚಿಸಿದ್ದೇನೆ. ಇಟ್ಟಿಗೆ ಭಟ್ಟಿ ಹಾಳಾಗಿದೆ. ಸುಮಾರು 50 ಎಕರೆ ಬೆಳೆಹಾನಿಯಾಗಿದೆ. ಎಲ್ಲವನ್ನು ಸಮೀಕ್ಷೆ ನಡೆಸಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ನಗರೋತ್ಥಾನದಲ್ಲಿ ₹ 125 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳ ನೀಲನಕ್ಷೆ ತಯಾರಿಸಿದ್ದು, ಅದಕ್ಕೆ ಅನುಮೋದನೆ ನೀಡಿದ್ದೇನೆ. ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿವೆ. ₹ 120 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ ಬಸ್‌ನಿಲ್ದಾಣ ನಿರ್ಮಾಣಗೊಳ್ಳಲಿದೆ. ಅದಕ್ಕೆ ಜ.18ರಂದು ಭೂಮಿಪೂಜೆ ನೆರವೇರಿಸಲಾಗುವುದು. ಚಿಗಟೇರಿ ಆಸ್ಪತ್ರೆ ಪುರಾತನವಾದುದು. ಹಾಗಾಗಿ ಹೊಸ ಕಟ್ಟಡ ನಿರ್ಮಾಣ ಅಗತ್ಯವಿದೆ. ಈ ಬಾರಿಯ ಬಜೆಟ್‌ನಲ್ಲಿ ಅದನ್ನು ಸೇರಿಸಲಾಗವುದು ಎಂದು ಭರವಸೆ ನೀಡಿದರು.

ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ ಈವರೆಗೆ ₹ 300 ಕೋಟಿಯ ಕಾಮಗಾರಿಗಳು ನಡೆದಿವೆ. ಇನ್ನೂ ₹ 650 ಕೋಟಿಯ ಕಾಮಗಾರಿ ಅನುಷ್ಠಾನಗೊಂಡಿಲ್ಲ. ಎಲ್ಲ ಕಾಮಗಾರಿಗಳು ಮುಗಿದಾಗ ದಾವಣಗೆರೆಯು ಸುಂದರ ನಗರವಾಗಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ಎಂಟಿಬಿ ನಾಗರಾಜ್‌, ಶಂಕರ್‌, ಮುನಿರತ್ನ ಅವರಿಗೆ ಸಚಿವ ಸ್ಥಾನ ಕೊಡಲೇಬೇಕು. ಸಚಿವ ಸ್ಥಾನ ಕೊಡುವುದಾಗಿ ಮುಖ್ಯಮಂತ್ರಿ ಕೂಡ ತಿಳಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬಸವನಗೌಡ ಪಾಟೀಲ ಯತ್ನಾಳ್‌ ಟೀಕೆಗೆ ಉತ್ತರಿಸುವುದಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT