ತ್ಯಾವಣಿಗೆ: ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಯಾವುದಾದರೂ 2-3 ಕ್ಷೇತ್ರಗಳ ಹೆಸರು ಹೇಳಿ ನೋಡೋಣ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದರು.
ಇಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಪರವಾಗಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ. ಹಣ, ಹೆಂಡ ಹಂಚಿ ಚುನಾವಣೆಯಲ್ಲಿ ಗೆಲ್ಲುವ ಕಾಲವಿತ್ತು. ಆದರೆ, ಕಾಲ ಬದಲಾವಣೆಯಾಗಿದೆ. ಪ್ರತಿಯೊಬ್ಬ ಮತದಾರನಿಗೂ ಚಿಂತನೆ ಮಾಡುವ ಶಕ್ತಿ ಇದೆ. ಕಾಂಗ್ರೆಸ್ನ ರಾಜಕೀಯ ಡೊಂಬರಾಟ ನಡೆಯುವುದಿಲ್ಲ ಎಂದು ತಿಳಿಸಿದರು.
ರೈತವಿರೋಧಿ, ಜನವಿರೋಧಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ವಿರೋಧಿ ಕಾಂಗ್ರೆಸ್ ಪಕ್ಷವನ್ನು ತಲೆ ಎತ್ತಲು ಬಿಡಬಾರದು. 2024ರ ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ನ ಅಡ್ರೆಸ್ ಇರುವುದಿಲ್ಲ. ಒಂದಿಲ್ಲೊಂದು ಹಗರಣಗಳಿಂದಾಗಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ ಎಂದು ಟೀಕಿಸಿದರು.
ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ, ಗಾಯತ್ರಿ ಸಿದ್ದೇಶ್ವರ ಅವರೂ ಸುಮಾರು 2 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವುದು ಖಚಿತ. ಮೋದಿ ಸರ್ಕಾರದ ಸಂಕಲ್ಪದೊಂದಿಗೆ ವಿಕಸಿತ ಭಾರತಕ್ಕಾಗಿ, ವಿಕಸಿತ ದಾವಣಗೆರೆ ನಿರ್ಮಾಣಕ್ಕಾಗಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಆಯುಷ್ಮಾನ್ ಭಾರತ್, ಕಿಸಾನ್ ಸಮ್ಮಾನ್ ಹೀಗೆ ಹಲವು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿರುವ ಮೋದಿ ನೇತೃತ್ವದ ಆಡಳಿತ ಮತ್ತೊಮ್ಮೆ ಬರಲು ಗಾಯತ್ರಿ ಸಿದ್ದೇಶ್ವರ ಅವರನ್ನು ಗೆಲ್ಲಿಸಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಮನವಿ ಮಾಡಿದರು.
ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮನವಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ಮುಖಂಡರು ಬಿಜೆಪಿಗೆ ಸೇರಿದರು. ಮಾಜಿ ಶಾಸಕರಾದ ಮುರುಗೇಶ್ ನಿರಾಣಿ, ಮಾಡಾಳ್ ವಿರೂಪಾಕ್ಷಪ್ಪ, ಪ್ರೊ.ಎನ್.ಲಿಂಗಣ್ಣ, ಬಸವರಾಜ್ ನಾಯ್ಕ, ಮುಖಂಡರಾದ ತೇಜಸ್ವಿ ಪಟೇಲ್, ಮಾಡಾಳ್ ಮಲ್ಲಿಕಾರ್ಜುನ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್, ಮಂಜುನಾಥ್, ಗಂಗಾಧರಪ್ಪ, ದೇವೇಂದ್ರಪ್ಪ, ಜೀವನಮೂರ್ತಿ, ಶ್ರೀನಿವಾಸ್ ದಾಸ್ ಕರಿಯಪ್ಪ, ಶ್ಯಾಮ್ ಹಾರಿಕಾ ಮಂಜುನಾಥ್ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.