ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಉದ್ಯೋಗ ಸೃಷ್ಟಿ, ಅಭಿವೃದ್ಧಿಯ ಕನವರಿಕೆ

ಮಧ್ಯ ಕರ್ನಾಟಕದ ಜನರ ಕನಸುಗಳಿಗೆ ಕೇಂದ್ರ ಬಜೆಟ್‌ ನೀರೆರೆದೀತೆ?
Last Updated 3 ಜುಲೈ 2019, 7:04 IST
ಅಕ್ಷರ ಗಾತ್ರ

ದಾವಣಗೆರೆ: ಜುಲೈ 5ರಂದು ಕೇಂದ್ರ ಸರ್ಕಾರ ಮಂಡಿಸಲಿರುವ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ ಮಧ್ಯ ಕರ್ನಾಟಕ ಭಾಗಕ್ಕೆ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳು, ದೇಶ–ವಿದೇಶಗಳೊಂದಿಗೆ ಸಂಪರ್ಕ ಸಾಧಿಸಲು ವಿಮಾನ ನಿಲ್ದಾಣ ಹಾಗೂ ರೈಲು ಸಂಪರ್ಕ ವಿಸ್ತರಣೆಯಂತಹ ಬಂಪರ್‌ ಕೊಡುಗೆಯ ನಿರೀಕ್ಷೆಯಲ್ಲಿ ಈ ಭಾಗದ ಜನರಿದ್ದಾರೆ.

ಕರ್ನಾಟಕದ ಹೃದಯಭಾಗವಾಗಿರುವ ದಾವಣಗೆರೆ, ನೆರೆಯ ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲೆಗಳ ಜನರ ದೃಷ್ಟಿ ಇದೀಗ ಬಜೆಟ್‌ನ ಘೋಷಣೆಗಳ ಮೇಲೆ ನೆಟ್ಟಿದೆ. ಆಯ್ಕೆ ಮಾಡಿ ಕಳುಹಿಸಿರುವ ಸಂಸದರು, ತಮ್ಮೂರಿಗೆ ಯಾವ ಯಾವ ಯೋಜನೆಗಳ ಹಾಕಿಸಿಕೊಂಡು ಬರಲಿದ್ದಾರೆ ಎಂದು ಕಾತರದಿಂದ ಕಾಯುತ್ತಿದ್ದಾರೆ.

ಒಂದು ಕಾಲದಲ್ಲಿ ‘ಮ್ಯಾಂಚೆಸ್ಟರ್‌ ಆಫ್‌ ಕರ್ನಾಟಕ’ ಎನಿಸಿಕೊಂಡಿದ್ದ ದಾವಣಗೆರೆಯಲ್ಲಿ ಯಾವುದೇ ಬೃಹತ್‌ ಕೈಗಾರಿಕೆಗಳು ಇಲ್ಲದಿರುವುದರಿಂದ ಸ್ಥಳೀಯವಾಗಿ ನಿರುದ್ಯೋಗ ಸಮಸ್ಯೆ ಬೃಹದಾಕಾರವಾಗಿ ಕಾಡುತ್ತಿದೆ. ಹೀಗಾಗಿ ಇಲ್ಲಿ ಜವಳಿ ಸೇರಿ ಹಲವು ಉದ್ಯಮಗಳ ಸ್ಥಾಪನೆಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಪ್ರತಿಪಾದಿಸುತ್ತಾರೆ ನಗರದ ಎ.ವಿ.ಕೆ. ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಎಚ್‌.ಎಸ್‌. ಮಂಜುನಾಥ ಕುರ್ಕಿ.

ಚಿತ್ರದುರ್ಗ, ಬಳ್ಳಾರಿ, ಹಾವೇರಿ ಜಿಲ್ಲೆಯಿಂದಲೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ನಿತ್ಯ ನೂರಾರು ರೋಗಿಗಳು ಬರುತ್ತಿದ್ದಾರೆ. ಹೀಗಾಗಿ ಇಲ್ಲಿನ ಜಿಲ್ಲಾ ಆಸ್ಪತ್ರೆಯನ್ನು ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕಾಗಿದೆ. ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಮೂಲಕ ಕೈಗಾರಿಕೆಗಳನ್ನು ಆರಂಭಿಸಲು ಪೂರಕ ವಾತಾವರಣ ಸೃಷ್ಟಿಸಬೇಕಾಗಿದೆ.

ತಾಲ್ಲೂಕಿನ ಮಾಯಕೊಂಡ–ರಾಂಪುರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸರ್ಕಾರಿ ಭೂಮಿ ಲಭ್ಯವಿದ್ದು, ಭಾರತೀಯ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯವನ್ನು ಇಲ್ಲಿ ಸ್ಥಾಪಿಸಬೇಕು ಎಂದು ಪ್ರದೇಶ ರೈತ ಸಂಘದ ಅಧ್ಯಕ್ಷ ಎಂ.ಎಸ್‌.ಕೆ. ಶಾಸ್ತ್ರಿ ಒತ್ತಾಯಿಸುತ್ತಾರೆ.

ರೈಲು ಯೋಜನೆಯತ್ತ ಚಿತ್ತ: ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಪ್ರಮುಖ ಬೇಡಿಕೆಗಳ ಪೈಕಿ ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗವೂ ಒಂದು. ಈ ಯೋಜನೆ ಮಂಜೂರಾಗಿದ್ದರೂ ಭೂಸ್ವಾಧೀನ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರವೂ ಶೇ 50ರಷ್ಟು ಅನುದಾನ ಭರಿಸುವುದಾಗಿ ಹೇಳಿತ್ತು.

ಆದರೆ, ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ವಿಳಂಬವಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರವೇ ಈ ಯೋಜನೆಗೆ ಸಂಪೂರ್ಣ ವೆಚ್ಚವನ್ನು ಭರಿಸಿ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕು ನೀಡಬೇಕು. ದಾವಣಗೆರೆ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಬೇಕು. ಯಶವಂತಪುರದಿಂದ ದಾವಣಗೆರೆ–ಬೆಳಗಾವಿ–ಮಿರಜ್‌ ರೈಲು ನಿಲ್ದಾಣದವರೆಗೆ ಎಲೆಕ್ಟ್ರಿಕ್‌ ಎಕ್ಸ್‌ಪ್ರೆಸ್‌ ಎಂಜಿನ್‌ ರೈಲನ್ನು ಓಡಿಸಲು ₹ 18 ಸಾವಿರ ಕೋಟಿ ಬಜೆಟ್‌ನಲ್ಲಿ ಮೀಸಲಿಡಬೇಕು ಎಂಬುದು ಈ ಭಾಗದ ಜನರ ನಿರೀಕ್ಷೆ.

‘ಹರಿಹರ–ಶಿವಮೊಗ್ಗ ರೈಲು ಮಾರ್ಗ ಸರ್ವೆ ಕಾರ್ಯ ಬೇಗನೆ ಪೂರ್ಣಗೊಳಿಸಬೇಕು. ಗದಗ–ಹರಪನಹಳ್ಳಿ ರೈಲು ಮಾರ್ಗ ಸರ್ವೆ ಮುಗಿಸಿ ಕೆಲಸ ಆರಂಭಿಸಬೇಕು. ಚಿಕ್ಕಮಗಳೂರು–ಹೊಸಪೇಟೆ (ದಾವಣಗೆರೆ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮಾರ್ಗವಾಗಿ) ರೈಲನ್ನು ನಿತ್ಯ ಓಡಿಸಬೇಕು. ಮೀರಜ್–ಮಂಗಳೂರು ಎಕ್ಸ್‌ಪ್ರೆಸ್‌ ರೈಲನ್ನು ಬಜೆಟ್‌ನಲ್ಲಿ ಘೋಷಿಸಬೇಕು’ ಎಂದು ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಂಘದ ರೋಹಿತ್ ಎಸ್. ಜೈನ್‌ ಒತ್ತಾಯಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಜನ ಹಲವು ವರ್ಷಗಳಿಂದ ಭದ್ರೆಯ ನೀರಿಗಾಗಿ ಕಾಯುತ್ತಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿರುವುದು ರೈತರಲ್ಲಿ ಹತಾಶ ಭಾವ ಮೂಡಿಸಿದ್ದು, ಹಲವು ಬಾರಿ ಪ್ರತಿಭಟನೆಯ ಹಾದಿಯನ್ನೂ ಹಿಡಿದಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ‘ರಾಷ್ಟ್ರೀಯ ನೀರಾವರಿ ಯೋಜನೆ’ ಎಂದು ಘೋಷಿಸಿ ಕೇಂದ್ರ ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂಬುದು ರೈತರ ಹಕ್ಕೊತ್ತಾಯವಾಗಿದೆ.

ನಿರಂತರವಾಗಿ ಬರ ಎದುರಿಸುತ್ತಿರುವುದರಿಂದ ಚಿತ್ರದುರ್ಗ ಜಿಲ್ಲೆಯ ಕಾರ್ಮಿಕರು ಕೂಲಿ ಕೆಲಸ ಹುಡುಕಿಕೊಂಡು ಬೆಂಗಳೂರು ಸೇರಿ ಕೆಲವು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ವಲಸೆ ತಪ್ಪಿಸಲು ಜನರಿಗೆ ಸ್ಥಳೀಯವಾಗಿ ಉದ್ಯೋಗ ನೀಡಲು ಈ ಹಿಂದೆ ಭರವಸೆ ನೀಡಿರುವಂತೆ ರಸಗೊಬ್ಬರ ಕಾರ್ಖಾನೆಯನ್ನು ಆರಂಭಿಸಬೇಕು. ಇನ್ನಷ್ಟು ಕೈಗಾರಿಕೆ ಸ್ಥಾಪಿಸಲು ಅನುದಾನ ನೀಡಬೇಕು ಎಂಬುದು ಈ ಭಾಗದ ಉದ್ಯೋಗಾಕಾಂಕ್ಷಿಗಳ ಕೂಗು.

ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಸಿಗಂದೂರು ನಡುವೆ ಸಂಪರ್ಕ ಕಲ್ಪಿಸುವ ಶರಾವತಿ ಹಿನ್ನೀರಿಗೆ ತುಮರಿ ಸೇತುವೆ ನಿರ್ಮಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ವರ್ಷದ ಹಿಂದೆಯೇ ಶಂಕುಸ್ಥಾಪನೆ ನೆರವೇರಿಸಿದ್ದರೂ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಅಂದಾಜು ₹ 600 ಕೋಟಿ ವೆಚ್ಚದ ಈ ಯೋಜನೆಗೆ ಸರ್ಕಾರ ಇನ್ನೂ ಅನುದಾನ ಬಿಡುಗಡೆ ಮಾಡಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ಅನುದಾನ ನೀಡಿ ಕೂಡಲೇ ಕೆಲಸ ಆರಂಭಿಸಬೇಕು ಎಂಬುದು ಜನರ ಬಹುಮುಖ್ಯ ಬೇಡಿಕೆಯಾಗಿದೆ.

ಖಾಸಗೀಕರಣದ ಭೀತಿಯನ್ನು ಎದುರಿಸುತ್ತಿರುವ ಭದ್ರಾವತಿಯ ವಿಎಸ್‌ಐಎಲ್‌ ಕಾರ್ಖಾನೆಯ ಪುನಶ್ಚೇತನಕ್ಕೆ ಅನುದಾನ ನೀಡಿ, ಐತಿಹಾಸಿಕ ಕಾರ್ಖಾನೆಯನ್ನು ಉಳಿಸಬೇಕು ಎಂಬುದು ಮಲೆನಾಡಿನ ಜನರ ಒಕ್ಕೊರಲಿನ ಕೂಗು. ಜುಲೈ 2ರಂದು ಸಂಸತ್ತಿನಲ್ಲಿ ಶೂನ್ಯವೇಳೆಯಲ್ಲಿ ಶಿವಮೊಗ್ಗದ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಅವರು ವಿಎಸ್‌ಐಎಲ್‌ ಪುನಶ್ಚೇತನ ವಿಚಾರ ಪ್ರಸ್ತಾಪಿಸಿದ್ದು, ಈ ಬಗ್ಗೆ ಇನ್ನಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಬೆಳೆಯಾಗಿರುವ ಅಡಿಕೆಯ ಬೆಲೆ ಸ್ಥಿರವಾಗಿರಲು ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂಬುದು ಬೆಳೆಗಾರರ ನಿರೀಕ್ಷೆ.

ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲು ರಾಣೆಬೆನ್ನೂರು–ಶಿವಮೊಗ್ಗ ಹಾಗೂ ಹರಿಹರ–ಶಿವಮೊಗ್ಗ ರಸ್ತೆಗೆ ಕೇಂದ್ರ ಸರ್ಕಾರ ಅನುದಾನ ನೀಡಬೇಕು. ನನೆಗುದಿಗೆ ಬಿದ್ದಿರುವ ವಿಮಾನನಿಲ್ದಾಣ ನಿರ್ಮಾಣ ಯೋಜನೆಗೆ ಅನುದಾನ ನೀಡುವ ಮೂಲಕ ಕೈಗಾರಿಕೆಗಳನ್ನು ಸ್ಥಾಪಿಸಲು ಪೂರಕ ವಾತಾವರಣ ನಿರ್ಮಿಸಬೇಕು ಎಂಬುದು ಮಲೆನಾಡಿನ ಜನರ ಬಯಕೆಯಾಗಿದೆ.

ಶಿವಮೊಗ್ಗದಲ್ಲಿ ‘ಮೆಡಿಸಿನ್‌ ಪಾರ್ಕ್‌’ ನಿರ್ಮಿಸಲು ಜಾಗ ಮೀಸಲು ಇಡಲಾಗಿದೆ. ಇದಕ್ಕೆ ಅಗತ್ಯ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು ಎಂಬುದು ಜನರ ಒತ್ತಾಸೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT