ದಾವಣಗೆರೆ: ನಗರ ಸೇರಿ ಜಿಲ್ಲೆಯ ವಿವಿಧೆಡೆ ವಿದ್ಯಾರ್ಥಿಗಳು ಶುಕ್ರವಾರ ಎರಡನೇ ದಿನದ ಸಿಇಟಿ ಪರೀಕ್ಷೆ ಬರೆದರು. ಎಲ್ಲೆಡೆ ಸುಗಮ ಪರೀಕ್ಷೆ ನಡೆಯಿತು.
ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕೈಗೊಂಡು ಪರೀಕ್ಷೆ ನಡೆಸಲಾಯಿತು. ನಗರದ ಕೆಲ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.
ದಾವಣಗೆರೆ ನಗರದ 13 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಚನ್ನಗಿರಿ, ಹರಿಹರ, ಹೊನ್ನಾಳಿಯ ತಲಾ 1 ಪರೀಕ್ಷಾ ಕೇಂದ್ರಗಳು ಸೇರಿ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಪರೀಕ್ಷೆಗಳನ್ನು ನಡೆಸಲಾಯಿತು.
ಬೆಳಿಗ್ಗೆ ನಡೆದ ಭೌತಶಾಸ್ತ್ರ ಪರೀಕ್ಷೆಗೆ 6,976 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 6,425 ವಿದ್ಯಾರ್ಥಿಗಳು ಹಾಜರಾಗಿದ್ದರು. 551 ವಿದ್ಯಾರ್ಥಿಗಳು ಗೈರಾಗಿದ್ದರು.
ಮಧ್ಯಾಹ್ನ ನಡೆದ ರಸಾಯನಶಾಸ್ತ್ರ ಸಾಮಾನ್ಯ ಪ್ರವೇಶ ಪರೀಕ್ಷೆಗೆ 6,976 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 6424 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 552 ವಿದ್ಯಾರ್ಥಿಗಳು ಗೈರಾಗಿದ್ದರು.
‘ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಇರುವ ಯಾವುದೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿಲ್ಲ. ಸುಗಮವಾಗಿ ಪರೀಕ್ಷೆ ನಡೆಯಿತು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಾಗರಾಜಪ್ಪ ಆರ್. ತಿಳಿಸಿದ್ದಾರೆ.