ದಾವಣಗೆರೆ: ಜಿಲ್ಲೆಯಲ್ಲಿ ಮೆಕ್ಕೆಜೋಳ ಮತ್ತು ಭತ್ತ ಖರೀದಿ ಕೇಂದ್ರವನ್ನು ಪ್ರಾಂಭಿಸಲು ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ನಗರದ ಜಯದೇವ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿತು.
‘ ಈ ವರ್ಷ ಉತ್ತಮ ಮಳೆಯಾಗಿದೆ. ಇದರಿಂದಾಗಿ ಮೆಕ್ಕೆಜೋಳ ಹಾಗೂ ಭತ್ತವನ್ನು ಹೆಚ್ಚು ಬೆಳೆಯಲಾಗಿದೆ. ಈಗ ಬೆಳೆ ಕೈಗೆ ಬರುವ ಹೊತ್ತಿನಲ್ಲಿ ಸರಿಯಾದ ಬೆಲೆ ಸಿಗುತ್ತಿಲ್ಲ. ಬೆಂಬಲಬೆಲೆ ನೀಡಿ ಖರೀದಿಸುವ ಕೇಂದ್ರಗಳನ್ನು ಆರಂಭೀಸಿದ್ದರೆ ಈ ಸಮಸ್ಯೆ ಆಗುತ್ತಿರಲಿಲ್ಲ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ಬಸವಂತಪ್ಪ ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜಿಲ್ಲಾಮಟ್ಟದಲ್ಲಿ ಭತ್ತ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರವನ್ನು ತೆರೆದು ರೈತರಿಗೆ ನೆರವಾಗಿತ್ತು. ಈಗಿನ ಬಿಜೆಪಿ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಬೆಲೆ ಪಾತಾಳಕ್ಕೆ ಕುಸಿದಿದೆ. ಮೆಕ್ಕೆಜೋಳಕ್ಕೆ ₹ 2,000 ಹಾಗೂ ಭತ್ತಕ್ಕೆ ₹ 2,500 ಬೆಲೆಯನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
ಬೆಳೆ ಕೈಗೆ ಬರುವ ಹೊತ್ತಿಗೆ ಈಚೆಗೆ ಸುರಿದ ಭಾರಿ ಮಳೆಯಿಂದಾಗಿ ಭತ್ತ, ಮೆಕ್ಕೆಜೋಳ ಸೇರಿ ಹಲವು ತೋಟಗಾರಿಕೆ ಬೆಳೆಗಳಿಗೆ ಹಾನಿ ಉಂಟಾಗಿದೆ. ಸರ್ಕಾರ ಕೂಡಲೇ ಅವರ ನೆರವಿಗೆ ಬರಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಎಪಿಎಂಸಿ ಅಧ್ಯಕ್ಷ ಚಂದ್ರಶೇಖರ್, ಮುಖಂಡರಾದ ಶಂಭು ಲಿಂಗಪ್ಪ, ಪ್ರಕಾಶ್, ಅಣಜಿ ಪ್ರಕಾಶ್ ಗೌಡ್ರು, ಶ್ಯಾಗಲೆ ಸತೀಶ್, ಅಂಜಿನಪ್ಪ, ರಾಮಗೊಂಡನಹಳ್ಳಿ ಮಲ್ಲಿಕಾರ್ಜುನ, ವೆಂಕಟೇಶ್ ಅವರೂ ಇದ್ದರು.
ಜಯದೇವ ವೃತ್ತದಿಂದ ಎಸಿ ಕಚೇರಿವರೆಗೆ ಪ್ರತಿಭಟನ ಮೆರವಣಿಗೆ ನಡೆಸಲಾಯಿತು. ಉಪ ವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.