ದಾವಣಗೆರೆ: ದಾವಣಗೆರೆ ಉತ್ತರ, ದಕ್ಷಿಣ ಮತ್ತು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ನೂತನ ಅಭಿನಂದನಾ ಸಮಾರಂಭ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಜ.16ರಂದು ಮಧ್ಯಾಹ್ನ 12ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಪರಶುರಾಮ್ ಹೇಳಿದರು.
ಗುರುವಾರಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯುವ ಸಮಾವೇಶವನ್ನು ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದು, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮಾಜಿ ಸಚಿವರು, ಶಾಸಕರು, ಎಐಸಿಸಿ, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಲಿದ್ದಾರೆ’ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಒಟ್ಟು 41 ಪಂಚಾಯಿತಿಯಿಂದ ದಾವಣಗೆರೆ ಉತ್ತರದಲ್ಲಿ 86 ಜನ, ದಕ್ಷಿಣದಲ್ಲಿ 56 ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ 209 ಜನರ ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ. ಆದರೆ ಬಿಜೆಪಿ ನಾಯಕರು ಹೆಚ್ಚಿನ ಸಂಖ್ಯೆ ತೋರಿಸುವ ಮೂಲಕ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು.
ಸಮಾವೇಶದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ಹೋರಾಟ ನಡೆಸಲು ಚರ್ಚಿಸಲಾಗುವುದು. ಅಲ್ಲದೇ ಜ. 20ರಂದು ಬೆಂಗಳೂರಿನಲ್ಲಿ ಕೆಪಿಸಿಸಿಯಿಂದ ಕಿಸಾನ್ ಅಧಿಕಾರ್ ದಿವಸ್ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ಬಸವಂತಪ್ಪ, ‘ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಹಲವು ಯೋಜನೆಗಳನ್ನು ಬಿಜೆಪಿ ಸರ್ಕಾರ ರದ್ದು ಮಾಡಿದೆ. ತಾಲ್ಲೂಕು ಪಂಚಾಯಿತಿಯನ್ನು ರದ್ದು ಮಾಡಬೇಕು ಎಂದು ಹೇಳುತ್ತಿದೆ.ರೈತ ಪರ ಎಂದು ಹೇಳುವ ಕೇಂದ್ರ, ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿವೆ’ ಎಂದು ದೂರಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ‘ಸರ್ಕಾರ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿಲ್ಲ. ಖರೀದಿ ಕೇಂದ್ರ ತೆರೆದಿಲ್ಲ. ಎಪಿಎಂಸಿ ಆವರ್ತ ನಿಧಿ ಬಳಕೆಗೆ ಕ್ರಮ ಕೈಗೊಳ್ಳುತ್ತಿಲ್ಲ. ಭದ್ರಾ ನಾಲೆಗೆ ಇದೇ 6 ರಿಂದ ನೀರು ಬಿಡುತ್ತೇವೆ ಎಂದು ಹೇಳಿದ್ದರು. ಇನ್ನೂ ನೀರು ಹರಿಸಿಲ್ಲ. ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಹಲವು ಕಾಮಗಾರಿ ಪೂರ್ಣಗೊಂಡಿಲ್ಲ. ಅವು ಮುಗಿದು ನೀರು ಬಿಡುವುದು ಯಾವಾಗ’ ಎಂದು ಪ್ರಶ್ನಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಸಿ. ನಿಂಗಪ್ಪ, ಮಾಜಿ ಸದಸ್ಯ ಬಿ. ಕರಿಬಸಪ್ಪ, ಎಪಿಎಂಸಿ ಅಧ್ಯಕ್ಷ ಅಣಜಿ ಚಂದ್ರಶೇಖರಪ್ಪ, ನಾಗರಾಜ್, ಬೂದಾಳ್ ಬಾಬು, ಮಂಜುನಾಥ, ಶಂಭುಲಿಂಗಪ್ಪ, ಎಸ್.ಕೆ. ಮಲ್ಲಿಕಾರ್ಜುನ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.