ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿಯಂತ್ರಣ ನಿರ್ಬಂಧ 31ರವರೆಗೆ ಮುಂದುವರಿಕೆ: ಮಹಾಂತೇಶ ಬೀಳಗಿ

ಸಂಕ್ರಾಂತಿ ಹಬ್ಬಕ್ಕೂ ಮಾರ್ಗಸೂಚಿ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
Last Updated 14 ಜನವರಿ 2022, 6:41 IST
ಅಕ್ಷರ ಗಾತ್ರ

ದಾವಣಗೆರೆ: ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದಾಗಿ ಮುಂಜಾಗ್ರತಾ ಕ್ರಮವಾಗಿ ನಿಯಂತ್ರಣಕ್ಕೆ ಸರ್ಕಾರ ಜ. 4ರಂದು ಹೊರಡಿಸಿದ್ದ ಮಾರ್ಗಸೂಚಿ ಜ. 31ರ ವರೆಗೂ ಮುಂದುವರಿಯಲಿದೆ. ಇದರೊಂದಿಗೆ ವಾರಾಂತ್ಯ ಕರ್ಫ್ಯೂ ಮುಂದುವರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಸಂಕ್ರಾಂತಿ ಹಬ್ಬದ ಪ್ರಯುಕ್ತ ದೇವಾಲಯದ ಒಳ ಆವರಣದಲ್ಲಿ ಮಾತ್ರ ಸಂಪ್ರದಾಯದಂತೆ ದೈನಂದಿನ ಪೂಜಾ ಕೈಂಕರ್ಯ ನಡೆಸಲು ಅನುಮತಿಸಿದೆ. ಪೂರ್ಣ ಪ್ರಮಾಣದ ಕೋವಿಡ್ ಲಸಿಕೆ ಪಡೆದ 50 ಜನರಿಗೆ ಮಾತ್ರ ಒಂದು ಬಾರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ಯಾವುದೇ ಸೇವೆಗೆ ಅನುಮತಿ ಇಲ್ಲ. ಹಬ್ಬಗಳ ಆಚರಣೆಗಾಗಿ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮ ಮಾಡುವಂತಿಲ್ಲ ಎಂದು ಸೂಚಿಸಿದ್ದಾರೆ.

ಪ್ರತಿದಿನ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ದಿನಗಳಲ್ಲಿ ಪಬ್ಸ್, ಕ್ಲಬ್ಸ್, ರೆಸ್ಟೋರಂಟ್ಸ್, ಬಾರ್‌, ಹೋಟೆಲ್‌ಗಳು, ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ರಂಗಮಂದಿರಗಳು, ಆಡಿಟೋರಿಯಂ, ಈಜುಕೊಳ, ಜಿಮ್, ಕ್ರೀಡಾ ಕಾಂಪ್ಲೆಕ್ಸ್ ಇತ್ಯಾದಿ ಸ್ಥಳಗಳಲ್ಲಿ ಶೇ 50 ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಬಹುದು. ಕೈಗಾರಿಕೆ, ಕಂಪನಿಗಳ ಕಾರ್ಯನಿರ್ವಹಣೆ ಇರುತ್ತದೆ. ಅಧಿಕೃತ ಗುರುತಿನ ಚೀಟಿಯೊಂದಿಗೆ ಸಂಬಂಧಪಟ್ಟವರು ಹೋಗಬೇಕು.

ಟೆಲಿಕಾಂ, ಇಂಟರ್‌ನೆಟ್ ಸೇವೆ ಪೂರೈಕೆದಾರರು, ತುರ್ತು ಸೇವೆಗೆ ಸಂಬಂಧಿಸಿದ ವಾಹನ ಹಾಗೂ ಸಿಬ್ಬಂದಿ ಗುರುತಿನ ಕಾರ್ಡ್ ತೋರಿಸಬೇಕು. ವೈದ್ಯಕೀಯ, ಔಷಧ ಸೇವೆ ಸಂಬಂಧಪಟ್ಟವರಿಗೆ ನಿರ್ಬಂಧ ಇರುವುದಿಲ್ಲ. ಸರಕು ಸಾಗಾಣಿಕೆ ಸಾಗಿಸುವ ವಾಹನ, ಟ್ರಕ್, ಗೃಹ ಪೂರೈಕೆ ವಾಹನಗಳು, ಇ-ಕಾಮರ್ಸ್ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ. ಬಸ್, ರೈಲು, ಸಾರ್ವಜನಿಕ ಸಾಗಾಣಿಕೆ ವಾಹನ, ಟ್ಯಾಕ್ಸಿ ಇತ್ಯಾದಿ ವಾಹನಗಳ ಓಡಾಟಕ್ಕೆ ಅಡ್ಡಿ ಇರುವುದಿಲ್ಲ. ಇದಕ್ಕೆ ಸಂಬಂಧಿಸಿದ ದಾಖಲೆ, ಟಿಕೆಟ್ ಹೊಂದಿರಬೇಕು.

ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ಸಂಪೂರ್ಣ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾಜ್ಯ, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕೋವಿಡ್‌ ನಿಯಂತ್ರಣ ನಿರ್ವಹಣೆಗೆ ಅಡ್ಡಿ ಇಲ್ಲ. ನಿರ್ವಹಣೆಗೆ, ತುರ್ತು ಸೇವೆಗೆ ನಿರ್ಬಂಧವಿಲ್ಲ. ಪಾರ್ಕ್‌ಗಳು ಮುಚ್ಚಲಾಗುತ್ತದೆ. ಆಹಾರ ಧಾನ್ಯ, ಆಹಾರ, ಹಣ್ಣು, ತರಕಾರಿ, ಮಾಂಸ, ಮೀನು, ಹಾಲು ಮತ್ತು ಇತರೆ ಡೈರಿ ಪದಾರ್ಥಗಳು, ಪಶು ಆಹಾರಕ್ಕೆ ಸಂಬಂಧಿಸಿದ ಅಂಗಡಿಗಳು ತೆರೆಯಲು ಅವಕಾಶವಿದೆ. ತಳ್ಳುಗಾಡಿಯಲ್ಲಿ ತರಕಾರಿ, ಹಣ್ಣುಗಳ ವ್ಯಾಪಾರಕ್ಕೆ ನಿರ್ಬಂಧ ಇಲ್ಲ. ಹೋಟೆಲ್, ರೆಸ್ಟೋರಂಟ್‍ಗಳಲ್ಲಿ ಪಾರ್ಸಲ್ ಸೇವೆ ಮಾತ್ರ ಇರುತ್ತದೆ. ಹೋಂ ಡೆಲಿವರಿ ವ್ಯವಸ್ಥೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರಯಾಣಿಕರಿದ್ದರೆ ಬಸ್‌ಗಳು ಓಡಲಿವೆ.

ಜ. 31 ರವರೆಗೆ ಜಿಲ್ಲೆಯಲ್ಲಿ ಯಾವುದೇ ಧರಣಿ, ಪ್ರತಿಭಟನೆ, ರ‍್ಯಾಲಿ, ಉತ್ಸವ, ಜಾತ್ರೆಗಳಿಗೆ ಅವಕಾಶವಿಲ್ಲ. ಮದುವೆಗಳಲ್ಲಿ ಹೊರಾಂಗಣದಲ್ಲಿ ಗರಿಷ್ಠ 200, ಒಳಾಂಗಣದಲ್ಲಿ ಗರಿಷ್ಠ 100 ಜನ ಮಾತ್ರ ಭಾಗವಹಿಸಲು ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT